ಪ್ರಧಾನಿ ನರೇಂದ್ರ ಮೋದಿ
ಕೃಪೆ: ಪಿಟಿಐ
ನವದೆಹಲಿ: ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
79ನೇ ಸ್ವಾತಂತ್ರ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿರುವ ಅವರು, 'ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ಸಾಧನೆಯ ಬಗ್ಗೆ ಇಡೀ ದೇಶ ಹೆಮ್ಮೆ ಪಡುತ್ತಿದೆ. ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಗೆ ವಾಪಸ್ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಭಾರತಕ್ಕೇ ನೇರವಾಗಿ ಮರಳಲಿದ್ದಾರೆ' ಎಂದು ಹೇಳಿದ್ದಾರೆ.
ವಾಣಿಜ್ಯ ಉದ್ದೇಶಿತ ಆಕ್ಸಿಯಂ -4 ಮಿಷನ್ನ ಭಾಗವಾಗಿ ಇತ್ತೀಚೆಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು 18 ದಿನಗಳ ಅಂತರಿಕ್ಷಯಾನ ಮುಗಿಸಿ ಭೂಮಿಗೆ ವಾಪಸ್ಸಾಗಿದ್ದಾರೆ. ಅವರೆಲ್ಲ, ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೊ ಕರಾವಳಿಯಲ್ಲಿ ಜುಲೈ 15ರಂದು ಇಳಿದಿದ್ದರು.
ಎಲ್ಲ ಕ್ಷೇತ್ರಗಳಂತೆ ಬಾಹ್ಯಾಕಾಶ ವಲಯದಲ್ಲೂ ಸ್ವಾವಲಂಬಿಯಾಗಲು ಶ್ರಮಿಸುತ್ತಿರುವ ಭಾರತ, 'ಗಗನಯಾನ' ಉಡಾವಣೆಗೆ ಸಜ್ಜಾಗುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.
'ಗಗನಯಾನ' ಮಾನವನನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಯೋಜನೆಯ ನೌಕೆಯಾಗಿದೆ.
'ನಾವು ನಮ್ಮದೇ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುತ್ತೇವೆ' ಎಂದೂ ಮೋದಿ ಇದೇ ವೇಳೆ ಭರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರವು ಇತ್ತೀಚಿನ ದಿನಗಳಲ್ಲಿ ತಂದಿರುವ ಸುಧಾರಣಾ ಕ್ರಮಗಳಿಂದಾಗಿ 300ಕ್ಕೂ ಅಧಿಕ ನವೋದ್ಯಮಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಕ್ರಿಯಗೊಂಡಿವೆ ಎಂದಿರುವ ಅವರು, 'ಸಾವಿರಾರು ಯುವಕರು ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದು ನಮ್ಮ ಯುವಕರ ಸಾಮರ್ಥ್ಯ. ನಾವು ನಮ್ಮ ಯುವ ಸಮೂಹದ ಮೇಲೆ ಇರಿಸಿರುವ ವಿಶ್ವಾಸದ ಸಂಕೇತ' ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.