ADVERTISEMENT

ಸೇನಾಪಡೆ ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ಮತ್ತು ಭಾರತ ಒಪ್ಪಂದ: ರಾಜನಾಥ್ ಸಿಂಗ್

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 16:29 IST
Last Updated 11 ಫೆಬ್ರುವರಿ 2021, 16:29 IST
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್   

ನವದೆಹಲಿ: ದೇಶದ ಸಾರ್ವಭೌಮತೆ ರಕ್ಷಣೆ ವಿಚಾರದಲ್ಲಿ ಯಾವುದೇ ಸವಾಲನ್ನು ಎದುರಿಸಲು ಸಿದ್ಧ ಎನ್ನುವುದನ್ನು ನಮ್ಮ ಭದ್ರತಾ ಪಡೆಗಳು ಮರುರೂಪಿಸಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ಗಡಿನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿ ಕುರಿತು ಮಾತನಾಡುತ್ತಾ ಅವರು, ಪ್ಯಾಂಗಾಂಗ್ ಸರೋವರದ ತೀರದಲ್ಲಿ ಸೇನಾ ನಿಯೋಜನೆ ಬಗ್ಗೆ ಚೀನಾ ಜತೆ ಮಾತುಕತೆ ನಡೆಸಲಾಗಿದೆ. ಯಾವುದೇ ರೀತಿಯ ಸೇನಾ ಚಟುವಟಿಕೆಗಳನ್ನು ನಡೆಸದಂತೆ ಉಭಯ ರಾಷ್ಟ್ರಗಳ ಮಧ್ಯೆ ಒಪ್ಪಂದವಾಗಿದ್ದು, ಮುಂದಿನ ಹಂತದಲ್ಲಿ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಗಡಿನಿಯಂತ್ರಣ ರೇಖೆಯ ಬಳಿ ನಿಯೋಜಿಸಲಾಗಿರುವ ಸೇನಾಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ಮತ್ತು ಭಾರತ ಒಪ್ಪಿಕೊಂಡಿವೆ, ಈ ಕುರಿತಂತೆ ಮಾತುಕತೆ ನಡೆಸಲಾಗಿದೆ. ಗಡಿಯಲ್ಲಿ ಶಾಂತಿಯುತ ಸ್ಥಿತಿಯನ್ನು ಕಾಯ್ದುಕೊಳ್ಳಲು ಮತ್ತು ದ್ವಿಪಕ್ಷೀಯ ಒಪ್ಪಂದಂತೆ ನಡೆದುಕೊಳ್ಳಲು ಭಾರತ ಯಾವತ್ತೂ ಬದ್ಧವಾಗಿದೆ ಎಂದು ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ADVERTISEMENT

ಗಡಿನಿಯಂತ್ರಣ ರೇಖೆಯ ಬಳಿ ಚೀನಾ ಸಾಕಷ್ಟು ಹೆಚ್ಚಿನ ಪ್ರಮಾಣದಲ್ಲಿ ಸೇನೆ ಮತ್ತು ಶಸ್ತ್ರಾಸ್ತ್ರ ನಿಯೋಜನೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಭಾರತವೂ ಪ್ರತ್ಯುತ್ತರವಾಗಿ ಹೆಚ್ಚಿನ ಪಡೆ, ಶಸ್ತ್ರಾಸ್ತ್ರ ನಿಯೋಜಿಸಿತ್ತು ಎಂದು ಸಚಿವ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.