ADVERTISEMENT

ಪಾಕಿಸ್ತಾನ ಜತೆಗಿನ ಸಮಸ್ಯೆ ದ್ವಿಪಕ್ಷೀಯವಾಗಿ ಪರಿಹರಿಸಿಕೊಳ್ಳಲು ಬದ್ಧ: ಭಾರತ

ಪಿಟಿಐ
Published 26 ಫೆಬ್ರುವರಿ 2021, 3:04 IST
Last Updated 26 ಫೆಬ್ರುವರಿ 2021, 3:04 IST
ಸಾಂದರ್ಭಿಕ ಚಿತ್ರ (ರಾಯಿಟರ್ಸ್)
ಸಾಂದರ್ಭಿಕ ಚಿತ್ರ (ರಾಯಿಟರ್ಸ್)   

ನವದೆಹಲಿ: ನೆರೆಯ ಪಾಕಿಸ್ತಾನದೊಂದಿಗೆ ಸಹಜ ಬಾಂಧವ್ಯವನ್ನು ಭಾರತ ಬಯಸುತ್ತದೆ. ಎಲ್ಲ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಎಲ್ಲ ಕದನ ವಿರಾಮ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಹಾಗೂ ಪಾಕಿಸ್ತಾನ ಸೇನೆ ಒಪ್ಪಿರುವ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಈ ಹೇಳಿಕೆ ನೀಡಿದೆ.

‘ಪ್ರಮುಖ ವಿಷಯಗಳಲ್ಲಿ ನಮ್ಮ ನಿಲುವು ಬದಲಾಗಿಲ್ಲ. ಅದನ್ನು ಪುರುಚ್ಚರಿಸಬೇಕು ಎಂದು ನಾನು ಭಾವಿಸುವುದಿಲ್ಲ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ನಿಲುವೇನು ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ADVERTISEMENT

ಗಡಿ ನಿಯಂತ್ರಣ ರೇಖೆಯೂ ಸೇರಿದಂತೆ ಇತರ ಎಲ್ಲ ಪ್ರದೇಶಗಳಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲ ಒಪ್ಪಂದಗಳನ್ನು ಪಾಲಿಸುವುದಾಗಿ ಭಾರತ ಹಾಗೂ ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಗುರುವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರು. ಇದಾದ ಬಳಿಕ ವಿದೇಶಾಂಗ ಸಚಿವಾಲಯ ದ್ವಿಪಕ್ಷೀಯ ಬಾಂಧವ್ಯ ಕುರಿತ ಹೇಳಿಕೆ ನೀಡಿದೆ.

ಭಾರತ ಮತ್ತು ಪಾಕಿಸ್ತಾನ 2003ರಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ, ಬಳಿಕ ಅನೇಕ ಬಾರಿ ಕದನವಿರಾಮ ಉಲ್ಲಂಘನೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.