ADVERTISEMENT

16 ಲಕ್ಷ ಕೊರೊನಾ ಸೋಂಕಿತರ ಪೈಕಿ 10 ಲಕ್ಷ ಜನ ಗುಣಮುಖ –ಸಚಿವ ಹರ್ಷವರ್ಧನ್‌ 

ಏಜೆನ್ಸೀಸ್
Published 31 ಜುಲೈ 2020, 15:59 IST
Last Updated 31 ಜುಲೈ 2020, 15:59 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ:ದೇಶದಲ್ಲಿ ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು 16 ಸೋಂಕಿತರ ಪೈಕಿ ಇದುವರೆಗೂ 10 ಲಕ್ಷ ಜನರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ದನ್‌ ಶುಕ್ರವಾರ ತಿಳಿಸಿದ್ದಾರೆ.

ದೇಶದಾದ್ಯಂತ ಕಳೆದ 48 ಗಂಟೆಗಳಲ್ಲಿ ಒಂದು ಲಕ್ಷ ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಸಾವಿನ ಪ್ರಮಾಣ ಶೇ 2.18ರಷ್ಟು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಗುರುವಾರ ಒಂದೇ ದಿನ ಒಟ್ಟು 55,079 ಕೋವಿಡ್‌ ಪ್ರಕರಣಗಳು ದೃಢಪಟ್ಟಿಟ್ಟು 779 ಸೋಂಕಿತರು ಮೃತಪಟ್ಟಿದ್ದರು. ಶುಕ್ರವಾರ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ 30 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ.

ಮಹಾರಾಷ್ಟ್ರದಲ್ಲಿ 11,147, ಆಂಧ್ರಪ್ರದೇಶ 10,376, ತಮಿಳುನಾಡಿನಲ್ಲಿ 5,864, ಕರ್ನಾಟಕದಲ್ಲಿ 5483 ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಭಾರತದಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕರ್ನಾಟಕ ಹೊರತು ಪಡಿಸಿ ಆಂಧ್ರ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಅಗತ್ಯ ಸೇವೆಗಳಿಗೆ ತೊಂದರೆಯಾಗದಂತೆ ಆಗಸ್ಟ್‌ 31ರವರೆಗೂ ಲಾಕ್‌ಡೌನ್‌ ವಿಸ್ತರಣೆ ಮಾಡಲಾಗಿದೆ.

ADVERTISEMENT

ಭಾರತದಲ್ಲಿ ಕೋವಿಡ್-19 ಸೋಂಕಿನಿಂದ ಸಾಯುವವರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಜಾಗತಿಕವಾಗಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಸಾವಿನ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣದಲ್ಲಿ(ಶೇ 218ರಷ್ಟು)ದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ತಿಳಿಸಿದ್ದಾರೆ.

ಇಲ್ಲಿಯವರೆಗೂ ದೇಶದಲ್ಲಿ ಒಟ್ಟು 5,45,318 ಸಕ್ರಿಯ ರೋಗಿಗಳಿದ್ದಾರೆ. ಇವರಲ್ಲಿ ಕೇವಲ ಶೇ 0.28 ರಷ್ಟು ಮಾತ್ರ ವೆಂಟಿಲೇಟರ್‌ನಲ್ಲಿ ಇದ್ದಾರೆ. ಒಟ್ಟಾರೆ ಶೇ 1.61 ರಷ್ಟು ರೋಗಿಗಳಿಗೆ ತೀವ್ರ ನಿಗಾ ಘಟಕದ ಅಗತ್ಯವಿದೆ, ಶೇ 2.32 ರಷ್ಟು ರೋಗಿಗಳಿಗೆ ಆಮ್ಲಜನಕ ಪೂರೈಕೆಯ ಅಗತ್ಯವಿದೆ ಎಂದು ಅವರು ಮಾಹಿತಿ ನೀಡಿದರು.

ಕೋವಿಡ್‌ ನಿರ್ವಹಣೆ ತಂಡದ ಸಚಿವರು ಹಾಗೂ ವೈದ್ಯಾಧಿಕಾರಿಗಳು ಜೊತೆ ವಿಡಿಯೊ ಕಾನ್ಫರೆನ್ಸ್‌ ನಡೆಸಿದ ಬಳಿಕ ಅವರು ಮಾಧ್ಯಮಗಳಿ ಮಾಹಿತಿ ನೀಡಿದರು.

ಭಾರತದಲ್ಲಿ ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟಾರೆ ಶೇ 64.54ರಷ್ಟು ಚೇತರಿಕೆಯ ಪ್ರಮಾಣ ದಾಖಲಾಗಿದೆ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.