ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಉದ್ದೇಶಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿ ದೇಶದ ರೈತರು, ಮೀನುಗಾರರು ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಹಿತಾಸಕ್ತಿಯನ್ನು ರಕ್ಷಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರು ಶನಿವಾರ ತಿಳಿಸಿದ್ದಾರೆ.
‘ರೈತರು, ಮೀನುಗಾರರು ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಹಿತಾಸಕ್ತಿಗಳ ಬಗ್ಗೆ ಜಾಗರೂಕತೆ ವಹಿಸದೆ ನಾವು ಯಾವುದೇ ಒಪ್ಪಂದವನ್ನು ಮಾಡಿಕೊಳ್ಳುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಮೆರಿಕವು ಭಾರತದ ಕೃಷಿ ವಲಯದ ವಹಿವಾಟಿನಲ್ಲಿ ರಿಯಾಯಿತಿಯನ್ನು ಕೋರುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆಯು ಮಹತ್ವ ಪಡೆದಿದೆ.
ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ನೇತೃತ್ವದ ಭಾರತದ ತಂಡವು ಅಮೆರಿಕದ ಅಧಿಕಾರಿಗಳೊಂದಿಗೆ ಮೂರು ದಿನ ಮಾತುಕತೆ ನಡೆಸಿದೆ.
‘ಮಾತುಕತೆಯು ಯಶಸ್ವಿಯಾಗಿದೆ. ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಅಮೆರಿಕ ವಿಧಿಸಿರುವ ಸುಂಕದಿಂದಾಗಿ ಸಂಭವಿಸಿರುವ ಜಾಗತಿಕ ಪಲ್ಲಟಗಳ ನಡುವೆಯೂ 2025–26ರಲ್ಲಿ ಭಾರತದ ರಫ್ತಿನ ಪ್ರಮಾಣದಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ’ ಎಂದು ತಿಳಿಸಿದ್ದಾರೆ.