
ಸಂತಾಲಿ ಭಾಷೆಯಲ್ಲಿ ಭಾರತ ಸಂವಿಧಾನವನ್ನು ಬಿಡುಗಡೆಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮತ್ತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್
ಪಿಟಿಐ ಚಿತ್ರ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಲಿ ಭಾಷೆಯಲ್ಲಿ ಭಾರತ ಸಂವಿಧಾನವನ್ನು ಗುರುವಾರ ಬಿಡುಗಡೆ ಮಾಡಿದರು.
‘ಭಾರತೀಯ ಸಂವಿಧಾನವು ಸಂತಾಲಿ ಭಾಷೆಯಲ್ಲಿ ಲಭ್ಯವಿರುವುದು ಸಂತಾಲಿ ಜನರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಇದನ್ನು ಒಲ್ ಚಿಕಿ ಲಿಪಿಯಲ್ಲಿ ಬರೆಯಲಾಗಿದೆ. ಅವರ ಭಾಷೆಯಲ್ಲಿ ಸಂವಿಧಾನವನ್ನು ಓದಲು ಮತ್ತು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ದ್ರೌಪದಿ ಮುರ್ಮು ಅವರು ಹೇಳಿದರು.
ಒಲ್ ಚಿಕಿ ಲಿಪಿಯ ಶತಮಾನೋತ್ಸವದ ಸಂದರ್ಭದಲ್ಲಿ ಸಂವಿಧಾನವನ್ನು ಈ ಲಿಪಿಯಲ್ಲಿ ಹೊರತಂದಿರುವುದಕ್ಕೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಅವರ ತಂಡವನ್ನು ಮುರ್ಮು ಅವರು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮತ್ತು ಮೇಘವಾಲ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಸಂತಾಲಿ ಭಾಷೆಯನ್ನು 2003ರಲ್ಲಿ, 92ನೇ ಸಂವಿಧಾನಾತ್ಮಕ ತಿದ್ದುಪಡಿ ಕಾಯ್ದೆಯ ಮೂಲಕ ಭಾರತದ ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.