ADVERTISEMENT

ಪೌರತ್ವ ಬೆಂಕಿ| ಸಾರ್ವಜನಿಕ ಆಸ್ತಿ ನಾಶಮಾಡಿದವರು ಆತ್ಮಾವಲೋಕನ ಮಾಡಿಕೊಳ್ಳಲಿ: ಮೋದಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 12:59 IST
Last Updated 25 ಡಿಸೆಂಬರ್ 2019, 12:59 IST
   

ಲಖನೌ: ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ಘಟನೆಯಲ್ಲಿ ಭಾಗಿಯಾದವರುಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇಲ್ಲಿನಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ನಿರ್ಮಾಣ ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಬಳಿಕ ಅವರು ಮಾತನಾಡಿದರು. ಪ್ರತಿಭಟನೆಯ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ನಾಶ ಮಾಡಿ, ಹಿಂಸಾಚಾರದಲ್ಲಿ ತೊಡಗಿದ್ದ ಜನರು ನಾವು ಮಾಡಿದ್ದು ಸರಿಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಉತ್ತಮ ರಸ್ತೆಗಳು, ಚರಂಡಿ ಮತ್ತು ಸಾರಿಗೆ ವ್ಯವಸ್ಥೆ ಪಡೆಯುವುದು ನಮ್ಮ ಹಕ್ಕು. ಹಾಗೇ ಇವುಗಳನ್ನು ರಕ್ಷಿಸಿಸುವುದು ನಮ್ಮ ಕರ್ತವ್ಯವಾಗಿದೆ. ಶಿಕ್ಷಣ ನಮ್ಮ ಹಕ್ಕಾದರೆ, ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸುವುದು ಮತ್ತು ಶಿಕ್ಷಕರನ್ನು ಗೌರವಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹಾಗೆಯೇ ಭದ್ರತೆಯ ವಾತಾವರಣ ನಮ್ಮ ಹಕ್ಕಾದರೆ, ಪೊಲೀಸರ ಕೆಲಸವನ್ನು ಗೌರವಿಸುವುದು ನಾಗರಿಕರ ಕರ್ತವ್ಯವಾಗಿದೆ ಎಂದು ಮೋದಿ ಹೇಳಿದರು.

ADVERTISEMENT

ಜಮ್ಮು ಮತ್ತು ಕಾಶ್ಮಿರಕ್ಕೆ ಸಂಬಂಧಿಸಿದಂತೆ ಸಂವಿಧಾನದ 370ನೇ ವಿಧಿ ರದ್ದು ಹಾಗೂ ರಾಮಮಂದಿರಾ ನಿರ್ಮಾಣ ಸಮಸ್ಯೆಗಳು ಶಾಂತಿಯುತವಾಗಿ ಬಗೆಹರಿದಿವೆ.ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ವಲಸಿಗರಿಗೆಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮೂಲಕ ಪೌರತ್ವ ನೀಡುವುದು ಜಾರಿಯಾಗಿದೆ. ದೇಶದ130 ಕೋಟಿ ಜನರು ಇಂತಹ ಸವಾಲುಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ ಕಂಡುಕೊಂಡಿದ್ದಾರೆ ಎಂದು ಮೋದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.