ನವದೆಹಲಿ:ಐಎನ್ಎಕ್ಸ್ ಮೀಡಿಯಾದ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಲು ಅಥವಾ ಬಂಧಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ವಿಶೇಷ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ.
ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಚಿದಂಬರಂ ಅವರು ಸದ್ಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ಟೋಬರ್ 17ರವರೆಗೆ ನ್ಯಾಯಾಂಗ ಬಂಧನದ ಅವಧಿ ಇದೆ.
‘ಚಿದಂಬರಂ ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಬಹುದು. ಅಗತ್ಯವಿದ್ದಲ್ಲಿ ಬಂಧಿಸಬಹುದು ಎಂದು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್’ ಇ.ಡಿಗೆ ಸೂಚಿಸಿದ್ದಾರೆ.
ಚಿದಂಬರಂ ಬಂಧನಕ್ಕೆ ಅನುಮತಿ ಕೋರಿಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ್ದ ದೆಹಲಿ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇ.ಡಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಚಿದಂಬರಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಕೂಡಾ ಅಭಿಪ್ರಾಯಪಟ್ಟಿದೆ’ ಎಂದು ಗಮನಕ್ಕೆ ತಂದಿದ್ದರು. ಹಣ ವರ್ಗಾವಣೆ ಆರೋಪ ಪ್ರತ್ಯೇಕ ಪ್ರಕರಣ ಎಂದು ಪ್ರತಿಪಾದಿಸಿದ್ದ ಅವರು, ಚಿದಂಬರಂ ಅವರನ್ನು ಬಂಧಿಸಲು ಅನುಮತಿ ಹಾಗೂ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.