ಕೋಲ್ಕತ್ತ:ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ವಿಜಯ ದಾಖಲಿಸಿದೆ ಎಂದು ಭವಿಷ್ಯ ನುಡಿಯಲು ಪ್ರಧಾನಿ ನರೇಂದ್ರ ಮೋದಿ ಯಾರು? ದೇವರು ಅಥವಾ ಸೂಪರ್ ಹ್ಯೂಮನ್ ಆಗಿದ್ದಾರೆಯೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.
ನೀವು (ಮೋದಿ) ಸ್ವಯಂ ಏನನ್ನು ಯೋಚಿಸುತ್ತೀರಿ? ದೇವರು ಅಥವಾ ಸೂಪರ್ ಹ್ಯೂಮನ್? ಎಂದು ದೀದಿ ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಿ ಮೋದಿ ಅವರು ಬಿಜೆಪಿ ಸರ್ಕಾರವು ಅಧಿಕಾರಕ್ಕೇರಲಿದ್ದು, ಶೀಘ್ರದಲ್ಲೇ ಪಿಎಂ ಕಿಸಾನ್ ನಿಧಿ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿಕೆ ನೀಡಿದ್ದರು.
2024ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆಂದು ಟಿಎಂಸಿ ನಾಯಕರು ಹೇಳಿಕೆ ನೀಡಿದ್ದರು. ಇದರ ವಿರುದ್ಧವೂ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ದೀದಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದರು.
ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮಾರ್ಚ್ 27ರಿಂದ ಮತದಾನ ಆರಂಭವಾಗಿದ್ದು, ಏಪ್ರಿಲ್ 29ರ ವರೆಗೆ ನಡೆಯಲಿದೆ. ಎರಡು ಹಂತಗಳ ಮತದಾನ ಈಗಾಗಲೇ ಮುಕ್ತಾಯಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.