ADVERTISEMENT

ಬಿಜೆಪಿ ಸರ್ಕಾರದಿಂದ ಬಿಬಿಸಿ ಮೇಲೆ ರಾಜಕೀಯ ಸೇಡು: ಮಮತಾ ಬ್ಯಾನರ್ಜಿ

ಪಿಟಿಐ
Published 15 ಫೆಬ್ರುವರಿ 2023, 11:01 IST
Last Updated 15 ಫೆಬ್ರುವರಿ 2023, 11:01 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಬ್ರಿಟಿಷ್‌ ಬ್ರಾಡ್‌ ಕಾಸ್ಟಿಂಗ್‌ ಕಾರ್ಪೊರೇಷನ್‌ನ (ಬಿಬಿಸಿ) ದೆಹಲಿ ಮತ್ತು ಮುಂಬೈ ಕಚೇರಿಗಳಿಗೆ ದಾಳಿ ನಡೆಸಿರುವ ಆದಾಯ ತೆರಿಗೆಯ (ಐ.ಟಿ) ಅಧಿಕಾರಿಗಳು ಬುಧವಾರವೂ ಪರಿಶೀಲನೆ ಮುಂದುವರಿಸಿದ್ದಾರೆ.

ಇದನ್ನು ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಬಿಸಿ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಬಿಸಿ ಮೇಲೆ ಐಟಿ ದಾಳಿ ತುಂಬಾನೇ ದುರದೃಷ್ಟಕರ. ಇದು ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಭಾಗವಾಗಿದೆ ಎಂದು ಅವರು ಹೇಳಿದರು.

ಮಾಧ್ಯಮಗಳು ಕೇಸರಿ ಪಕ್ಷದ ನಿಯಂತ್ರಣದಲ್ಲಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಮುಂದೊಂದು ದಿನ ದೇಶದಲ್ಲಿ ಮಾಧ್ಯಮಗಳೇ ಇರುವುದಿಲ್ಲ. ಬಿಜೆಪಿಗೆ ಜನಾದೇಶದ ಬಗ್ಗೆ ಚಿಂತೆಯಿಲ್ಲ. ಸರ್ವಾಧಿಕಾರವೇ ಅವರ ಏಕೈಕ ಜನಾದೇಶ. ಹಿಟ್ಲರ್‌ಗಿಂತ ಮೀರಿದ್ದು ಎಂದು ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಸಾಕ್ಷ್ಯಚಿತ್ರ 'ಇಂಡಿಯಾ ದಿ ಮೋದಿ ಕ್ವೆಶನ್' ಅನ್ನು ಬಿಬಿಸಿ ಬಿಡುಗಡೆಗೊಳಿಸಿತ್ತು. 2002ರಲ್ಲಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಚಿತ್ರ ಇದಾಗಿದೆ.

ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಬಿಬಿಸಿ ಕಚೇರಿಗಳ ಮೇಲೆ ಐಟಿ ಕಾರ್ಯಾಚರಣೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.