ADVERTISEMENT

ಜಹಾಂಗಿರ್‌ಪುರಿ ಮನೆಗಳ ಧ್ವಂಸಕ್ಕೂ ಧರ್ಮಕ್ಕೂ ಸಂಬಂಧವಿಲ್ಲ: ಬಿಜೆಪಿ

ಪಿಟಿಐ
Published 20 ಏಪ್ರಿಲ್ 2022, 15:37 IST
Last Updated 20 ಏಪ್ರಿಲ್ 2022, 15:37 IST
ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ | ಪಿಟಿಐ ಚಿತ್ರ
ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ | ಪಿಟಿಐ ಚಿತ್ರ   

ನವದೆಹಲಿ: ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಮನೆಗಳ ಧ್ವಂಸಕ್ಕೂಧರ್ಮಕ್ಕೂ ಸಂಬಂಧವಿಲ್ಲ. ಇದು ಕಾನೂನು ನಡೆ ಎಂದು ಸಮರ್ಥನೆ ನೀಡಿದೆ.

ಒತ್ತುವರಿ ತೆರವು ವಿವಾದದ ಬಗ್ಗೆ ಬುಧವಾರ ಮಾತನಾಡಿದ ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ, ಒತ್ತುವರಿ ತೆರವು ವಿಚಾರವಾಗಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿರುವುದು ಬೇಸರವನ್ನುಂಟು ಮಾಡಿದೆ. 2014ರಿಂದ ಕೇಂದ್ರ ಸರ್ಕಾರವನ್ನು ದೂಷಿಸಲು ವಿಪಕ್ಷಗಳು ಇಂತಹ ವಿಚಾರಗಳಿಗೆ 'ಧಾರ್ಮಿಕ ದೃಷ್ಟಿಕೋನ'ವನ್ನು ಕೊಡುತ್ತಿವೆ ಎಂದು ಆರೋಪಿಸಿದ್ದಾರೆ.

'ನಮ್ಮ ಏಕೈಕ ಮಂತ್ರ ಸಬ್‌‌ ಕಾ ಸಾತ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌, ಸಬ್‌ ಕಾ ಪ್ರಯಾಸ್‌ ಆಗಿದೆ. ನರೇಂದ್ರ ಮೋದಿ ಅವರ ಪ್ರತಿಯೊಂದು ಯೋಜನೆ ಮತ್ತು ನೀತಿಗಳು ಜಾತಿ, ಧರ್ಮದ ಭೇದವಿಲ್ಲದೆ ಎಲ್ಲಾ ವರ್ಗಕ್ಕೂ ಅನ್ವಯವಾಗುವಂತದ್ದಾಗಿದೆ' ಎಂದು ಪಾತ್ರತಿಳಿಸಿದ್ದಾರೆ.

ADVERTISEMENT

ದೆಹಲಿ ಮತ್ತು ಮಧ್ಯಪ್ರದೇಶದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಬುಲ್ಡೋಜರ್‌ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಬಡವರು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗಿದೆ. ಬಿಜೆಪಿ ಸರ್ಕಾರ ಕೇವಲ ಮನೆಗಳನ್ನುಧ್ವಂಸ ಮಾಡುತ್ತಿಲ್ಲ, ನಮ್ಮ ಸಂವಿಧಾನವನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.