ಜೈಪುರ: ಶಾಲಾ ಕಾರ್ಯಕ್ರಮದಲ್ಲಿ ಬಾಲಕಿಯರು ಹಿಜಾಬ್ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಪ್ರೌಢ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಇಲ್ಲಿನ ಸುಭಾಷ್ ಚೌಕ್ ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಠಾಣೆ ಎದುರಿನ ರಸ್ತೆಯಲ್ಲಿ ಸೇರಿದ್ದ ಹಲವು ವಿದ್ಯಾರ್ಥಿನಿಯರು, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅವರು ಕ್ಷಮೆ ಕೋರಬೇಕು. ಅಲ್ಲದೆ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪಟ್ಟುಹಿಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾನಿರತ ವಿದ್ಯಾರ್ಥಿನಿಯರು, ‘ನಮ್ಮ ಶಾಲೆಯ ವಾರ್ಷಿಕ ಕಾರ್ಯಕ್ರಮಕ್ಕೆ ಬಂದಿದ್ದ ಅವರನ್ನು ನಾವು ಸ್ವಾಗತಿಸಿದ್ದೆವು. ಈ ವೇಳೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೇಳಿದರು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಉಸಿರಾಡಲು ಹೇಗೆ ಸಾಧ್ಯ ಎಂದೂ ಕೇಳಿದರು. ಅವರು ಕ್ಷಮೆ ಕೋರಲೇಬೇಕು’ ಎಂದು ಆಗ್ರಹಿಸಿದರು.
ಈ ವಿಚಾರದ ಕುರಿತು ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಅವರು ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸಲು ಯತ್ನಿಸಿದರು. ಆದರೆ, ಇದಕ್ಕೆ ಸ್ಪೀಕರ್ ಅವಕಾಶ ನೀಡಲಿಲ್ಲ. ಜೊತೆಗೆ ಅವರ ಹೇಳಿಕೆಯನ್ನು ಕಡತದಿಂದ ತೆಗೆದುಹಾಕಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.