ಶ್ರೀನಗರ : ನಗರದಲ್ಲಿ ಕೆಲವು ಅಂಗಡಿಗಳು ಬುಧವಾರ ಬೆಳಿಗ್ಗೆ ಬಾಗಿಲುಗಳನ್ನು ತೆರೆದಿದ್ದವು. ಆದರೆ, ಕಾಶ್ಮೀರ ಕಣಿವೆಯಾದ್ಯಂತ ಪ್ರಮುಖ ಮಾರುಕಟ್ಟೆಗಳು ಮತ್ತು ಇತರ ವ್ಯಾಪಾರ- ವಹಿವಾಟು ಸತತ 59ನೇ ದಿನವೂ ಬಂದ್ ಆಗಿವೆ.
ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರದಲ್ಲಿ ಜನವಜೀವನ ಸಹಜ ಸ್ಥಿತಿಗೆ ಬಂದಿಲ್ಲ. ಹಂದ್ವಾರ ಮತ್ತು ಕುಪ್ವಾರ ಪ್ರದೇಶಗ ಳನ್ನು ಹೊರತುಪಡಿಸಿ ಕಾಶ್ಮೀರದ ಉಳಿ ದೆಡೆ ಮೊಬೈಲ್ ಸೇವೆ ಬಂದ್ ಆಗಿದೆ.
‘ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳ ದುರ್ಬಳಕೆ ಆಗುವ ಸಾಧ್ಯತೆ ಇದೆ. ದುಷ್ಕರ್ಮಿಗಳು ಈ ಸೇವೆಗಳನ್ನು ಬಳಸಿಕೊಂಡು ಕಣಿವೆಯಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಬಹುದು. ಆದ್ದರಿಂದ ಬಂದ್ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಪರಿಸ್ಥಿತಿ ನೋಡಿಕೊಂಡು ಸೂಕ್ತ ಸಮಯದಲ್ಲಿ ಮೊಬೈಲ್ ಮತ್ತು ಇಂಟ ರ್ನೆಟ್ ಸೇವೆಗಳನ್ನು ಪುನಾ ಆರಂಭಿಸಲಾಗುವುದು. ಕಣಿವೆಯಲ್ಲಿ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
ಜಮ್ಮು ಸಹಜ ಸ್ಥಿತಿಗೆ: ಜಮ್ಮುವಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ.ಗೃಹ ಬಂಧನದಲ್ಲಿಟ್ಟಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಬಿಡುಗಡೆ ಮಾಡಿದ್ದು, ಅವರ ವಿರುದ್ಧ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಪ್ಪಿಗೆ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ (ಎನ್ಎಲ್ಯು) ಸ್ಥಾಪಿಸುವ ಮಸೂದೆಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ಒಪ್ಪಿಗೆ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
90ರ ದಶಕದ ಮಧ್ಯಭಾಗದಲ್ಲಿ ನಡೆದ ಅಖಿಲ ಭಾರತ ಕಾನೂನು ಸಚಿವರ ಸಮ್ಮೇಳನದಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿತ್ತು. ವೃತ್ತಿ ಪರ ಕಾನೂನು ಶಿಕ್ಷಣದ ಗುಣಮಟ್ಟ ಸುಧಾರಿಸಲು ನ್ಯಾಷನಲ್ ಸ್ಕೂಲ್ ಆಫ್ ಲಾ ಯುನಿವರ್ಸಿಟಿ ಮಾದರಿಯಲ್ಲಿ ಪ್ರತಿ ರಾಜ್ಯದಲ್ಲಿ ಕಾನೂನು ಶಾಲೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಈ ನಿರ್ಣಯದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಎಲ್ ಯು ಸ್ಥಾಪಿಸಲಾಗುತ್ತಿದೆ ಎಂದರು.
‘144 ಬಾಲಾಪರಾಧಿಗಳ ಬಂಧನ’
ನವದೆಹಲಿ: 370ನೇ ವಿಧಿ ರದ್ದುಪಡಿಸಿದ ನಂತರ 144 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಬಾಲಾಪರಾಧಿ ನ್ಯಾಯ ಸಮಿತಿ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಬಂಧಿತರ ಪೈಕಿ 142 ಬಾಲಾಪರಾಧಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇಬ್ಬರನ್ನು ಬಾಲಗೃಹಕ್ಕೆ ಕಳುಹಿಸಲಾಗಿದೆ ಎಂದು ಸಮಿತಿ ನೀಡಿರುವ ವರದಿಯಲ್ಲಿ ಹೇಳಲಾಗಿದೆ.
ಮಕ್ಕಳ ಹಕ್ಕುಗಳ ಹೋರಾಟಗಾರರಾದಎನಾಕ್ಷಿ ಗಂಗೂಲಿ ಮತ್ತು ಶಾಂತಾ ಸಿನ್ಹಾ ಅವರು ಬಾಲಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಎಂ.ಆರ್.ಶಾ ಮತ್ತು ಬಿ.ಆರ್.ಗವಾಯಿ ಅವರಿದ್ದ ನ್ಯಾಯಪೀಠಕ್ಕೆ ಸಮಿತಿ ವರದಿ ಸಲ್ಲಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.