ADVERTISEMENT

ಹಿಜಾಬ್ ವಿವಾದ: ಧಾರ್ಮಿಕ ಭಾವನೆಗಳು, ಸಂವಿಧಾನವನ್ನು ಗೌರವಿಸಿ ಎಂದ ಮನೋಜ್ ಸಿನ್ಹಾ

ಪಿಟಿಐ
Published 13 ಫೆಬ್ರುವರಿ 2022, 2:13 IST
Last Updated 13 ಫೆಬ್ರುವರಿ 2022, 2:13 IST
ಮನೋಜ್ ಸಿನ್ಹಾ - ಪಿಟಿಐ ಚಿತ್ರ
ಮನೋಜ್ ಸಿನ್ಹಾ - ಪಿಟಿಐ ಚಿತ್ರ   

ಶ್ರೀನಗರ: ದೇಶದ ಪ್ರತಿಯೊಬ್ಬ ನಾಗರಿಕ ಕೂಡ ಇತರರ ಧಾರ್ಮಿಕ ಭಾವನೆಗಳನ್ನು ಮತ್ತು ಸಂವಿಧಾನವನ್ನು ಗೌರವಿಸಬೇಕು ಎಂದು ಜಮ್ಮು–ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.

‘ನಾನು ಎರಡು ವಿಚಾರಗಳ ಬಗ್ಗೆ ಹೇಳಲು ಇಚ್ಛಿಸುತ್ತೇನೆ. ಧಾರ್ಮಿಕ ಭಾವನೆಗಳನ್ನು ಗೌರವಿಸಿ ಮತ್ತು ಭಾರತೀಯ ಸಂವಿಧಾನವನ್ನೇ ಪರಮೋಚ್ಛವಾಗಿ ಪರಿಗಣಿಸಿ. ಪ್ರತಿಯೊಬ್ಬ ಭಾರತೀಯನೂ ಈ ಎರಡು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರವಾಗಿ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ವಿವಾದದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ, ಹಿಜಾಬ್ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚೇನೂ ಪ್ರತಿಕ್ರಿಯಿಸಲಾಗದು ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.

ಶ್ರೀನಗರದಲ್ಲಿ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸಂತ್ರಸ್ತೆಯ ಚಿಕಿತ್ಸೆಗೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಆಕೆ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಹಿರಿಯ ಅಧಿಕಾರಿಯೊಬ್ಬರು ಅಲ್ಲಿದ್ದು, ಪ್ರತಿ ದಿನದ ವಿವರವಾದ ಮಾಹಿತಿ ಒದಗಿಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜಮ್ಮ–ಕಾಶ್ಮೀರದಲ್ಲಿ ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವದ ಬಗ್ಗೆ ವ್ಯಕ್ತವಾಗಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಯೋಗದ ಬಗ್ಗೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು ಪಾರದರ್ಶಕವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಆಯೋಗದ ಕಡೆಯಿಂದ ಯಾವುದೇ ತಪ್ಪಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.