ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರಗಳ ಪುನರ್ ವಿಂಗಡಣಾ ಆಯೋಗವನ್ನು ಭೇಟಿ ಮಾಡದಿರಲು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ನಿರ್ಧರಿಸಿದೆ.
ಈ ಬಗ್ಗೆ ಪಿಡಿಪಿಯು ಕ್ಷೇತ್ರ ವಿಂಗಡಣಾ ಆಯೋಗದ ಮುಖ್ಯಸ್ಥರಾದ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರಿಗೆ ಪತ್ರ ಬರೆದಿದೆ.
‘ಆಯೋಗದಿಂದ ದೂರ ಉಳಿಯಲು ನಿರ್ಧರಿಸಿದ್ದೇವೆ. ಮೊದಲೇ ನಿರ್ಧಾರವಾಗಿರುವಂತಹ ಫಲಿತಾಂಶ ನೀಡುವ ಪ್ರಕ್ರಿಯೆಯ ಭಾಗವಾಗಲು ಪಕ್ಷ ಇಚ್ಛಿಸುವುದಿಲ್ಲ. ಇದರಿಂದ ಜಮ್ಮು–ಕಾಶ್ಮೀರದ ಜನರ ಹಿತಾಸಕ್ತಿಗೆ ಮತ್ತಷ್ಟು ತೊಂದರೆ ಉಂಟಾಗಬಹುದು’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಲೋನ್ ಹಂಜುರಾ ಅವರು ಪತ್ರದಲ್ಲಿ ಹೇಳಿದ್ದಾರೆ.
‘ಸಂವಿಧಾನದ 370ನೇ ವಿಧಿಯನ್ನು ‘ಕಾನೂನುಬಾಹಿರ ಮತ್ತು ಅಸಾಂವಿಧಾನಿಕವಾಗಿ’ ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ದೂರಲಾಗಿದೆ.
ಮೂವರು ಸದಸ್ಯರನ್ನೊಳಗೊಂಡ ಕ್ಷೇತ್ರ ವಿಂಗಡಣಾ ಆಯೋಗವು ಮಂಗಳವಾರದಿಂದ ಕೇಂದ್ರಾಡಳಿತ ಪ್ರದೇಶದ ರಾಜಕೀಯ ನಾಯಕರನ್ನು ಭೇಟಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.