ಉಗ್ರರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ವಪದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು, ದಾಳಿ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
‘2025ರ ಅಕ್ಟೋಬರ್ 13ರಂದು ಗಡಿಯಲ್ಲಿ ಒಳನುಸುಳುವ ಪ್ರಯತ್ನ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೈನ್ಯ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕುಪ್ವಾರದ ಮಚ್ಚಲ್ ವಲಯದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದೆ. ಅನುಮಾನಸ್ಪದ ಚಟುವಟಿಕೆಗಳು ಕಂಡ ಕೂಡಲೇ ಭದ್ರತಾ ಪಡೆಗಳು ಅವರನ್ನು ಹಿಮ್ಮೆಟ್ಟಿಸಿವೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತ್ಯುತ್ತರ ನೀಡಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅವರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಶ್ರೀನಗರ ಮೂಲದ ಚಿನಾರ್ ಪೊಲೀಸರು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.