ADVERTISEMENT

ಜಮ್ಮು–ಕಾಶ್ಮೀರ: ಸರ್ಕಾರಿ ಕಟ್ಟಡ, ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 9:42 IST
Last Updated 29 ಮಾರ್ಚ್ 2021, 9:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದ ಸರ್ಕಾರಿ ಕಟ್ಟಡ ಮತ್ತು ಸಂಸ್ಥೆಗಳಲ್ಲಿ 15 ದಿನಗಳ ಒಳಗಾಗಿ ರಾಷ್ಟ್ರಧ್ವಜ ಹಾರಿಸಬೇಕೆಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿಗಳು, ವಿಭಾಗೀಯ ಆಯುಕ್ತರು ಹಾಗೂ ಪೊಲೀಸ್ ಸುಪರಿಂಟೆಂಡೆಂಟ್‌ಗಳ ಜತೆ ಸಭೆ ನಡೆಸಿದ ಅವರು, ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯ ‘ಆಜಾದಿ ಕಾ ಅಮೃತ್‌ ಮಹೋತ್ಸವ್’ ಕಾರ್ಯಕ್ರಮದ ಅಡಿ ನಡೆಯುತ್ತಿರುವ ಚಟುವಟಿಕೆಗಳ ಪರಾಮರ್ಶೆ ನಡೆಸಿದ್ದಾರೆ. ಇದೇ ವೇಳೆ, ಸರ್ಕಾರಿ ಕಟ್ಟಡ ಮತ್ತು ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕುರಿತ ಸೂಚನೆಯನ್ನೂ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯಪಾಲರ ಸೂಚನೆಯನ್ನು ಪಾಲಿಸುವಂತೆ ವಿಭಾಗೀಯ ಆಯುಕ್ತರ ಕಚೇರಿಯು ಕೇಂದ್ರಾಡಳಿತ ಪ್ರದೇಶದ ಎಲ್ಲ ಉಪ ಆಯುಕ್ತರು ಮತ್ತು ವಿಭಾಗ ಮುಖ್ಯಸ್ಥರಿಗೆ ಆದೇಶಿಸಿದೆ ಎನ್ನಲಾಗಿದೆ.

ಈ ಮಧ್ಯೆ, 15 ದಿನಗಳ ಒಳಗಾಗಿ ಜಿಲ್ಲೆಯ ಎಲ್ಲ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂದು ಅನಂತ್‌ನಾಗ್‌ನ ಉಪ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ ಎಂದು ‘ಎಎನ್‌ಐ’ ವರದಿ ಮಾಡಿದೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರವು ‘ಆಜಾದಿ ಕಾ ಅಮೃತ್‌ ಮಹೋತ್ಸವ್’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಡಿ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ‘ಆಜಾದಿ ಕಾ ಅಮೃತ್‌ ಮಹೋತ್ಸವ್’ಗೆ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇದರ ಅಂಗವಾಗಿ 2022ರ ಆಗಸ್ಟ್ 15ರ ವರೆಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.