ADVERTISEMENT

ಅಕ್ರಮ ಗಣಿಗಾರಿಕೆ ಆರೋಪ: ಪ್ರಕರಣ ರದ್ದು ಕೋರಿದ ಅರ್ಜಿ ಹಿಂಪಡೆದ ಜನಾರ್ದನ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2019, 9:38 IST
Last Updated 26 ಫೆಬ್ರುವರಿ 2019, 9:38 IST
   

ಬೆಂಗಳೂರು: ‘ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ಎಂದು ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ನಾಲ್ಕು ಅರ್ಜಿಗಳನ್ನು ಗಾಲಿ ಜನಾರ್ದನ ರೆಡ್ಡಿ ಹಿಂಪಡೆದಿದ್ದಾರೆ.

ಈ ಕುರಿತ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರೆಡ್ಡಿ ಪರ ವಕೀಲರು ಅರ್ಜಿಗಳನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಸಮ್ಮತಿಸಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್ ಹಾಜರಿದ್ದರು.

ADVERTISEMENT

ಪ್ರಕರಣವೇನು?
ನಿವೃತ್ತ ಲೋಕಾಯುಕ್ತ ನ್ಯಾ‌ಯಮೂರ್ತಿ ಎನ್.ಸಂತೋಷ ಹೆಗ್ಡೆ ಮತ್ತು ಸಿಇಸಿ (ಸೆಂಟ್ರಲ್ ಎಂಪವರ್ ಕಮಿಟಿ) ವರದಿ ಆಧರಿಸಿ ಈ ಪ್ರಕರಣಗಳನ್ಮು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ತನಿಖೆ ನಡೆಸಿದ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆ ನೀಡುವಂತೆ ಕೋರಿ ರೆಡ್ಡಿ 2016ರಲ್ಲಿ ಹೈಕೋರ್ಟ್ ಮೊರೆ ಹೊಕ್ಕಿದ್ದರು. ಆದರೆ, ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.