ಕೋಲ್ಕತ್ತಾ: ದೇಶದಾದ್ಯಂತ ಜೆಇಇ ಮೇನ್ ಪರೀಕ್ಷೆ ನಡೆಯುತ್ತಿದ್ದು, ಭಾರತ ಬಂದ್ ಹಿನ್ನೆಲೆಯಲ್ಲಿ ಮಂಗಳವಾರ(ಜ.8) ವಿದ್ಯಾರ್ಥಿಗಳಿಗಾಗಿ ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಆಡಳಿತ ಸೂಕ್ತ ವ್ಯವಸ್ಥೆ ಮಾಡಿದೆ ಎಂದು ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಹೇಳಿರುವುದಾಗಿ ವರದಿಯಾಗಿದೆ. ಕೋಲ್ಕತ್ತಾದಲ್ಲಿ 2,200 ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ ತುರ್ತು ಸೇವೆಗಳಿಗಾಗಿಯೇ ಶೇ 30ರಷ್ಟು ಹೆಚ್ಚುವರಿ ಬಸ್ಗಳನ್ನು ಮೀಸಲಿಡಲಾಗಿದೆ.
ಜ.8ರಿಂದ ಜ.12ರ ವರೆಗೂ ನಿಗದಿಯಾಗಿರುವ ಜೆಇಇ ಮೇನ್ ಪರೀಕ್ಷೆಗೆ 9.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದೇ ಮೊದಲ ಬಾರಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುತ್ತಿದ್ದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಮೊದಲ ಬಾರಿಗೆ ಜೆಇಇ ಪರೀಕ್ಷೆ ಜವಾಬ್ದಾರಿ ವಹಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.