ADVERTISEMENT

ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಯುಪಿಎ ಶಾಸಕರು ಛತ್ತೀಸ್‌ಗಡ ರೆಸಾರ್ಟ್‌ಗೆ

ಪಿಟಿಐ
Published 30 ಆಗಸ್ಟ್ 2022, 13:44 IST
Last Updated 30 ಆಗಸ್ಟ್ 2022, 13:44 IST
ರಾಂಚಿ ವಿಮಾನ ನಿಲ್ದಾಣದತ್ತ ಪ್ರಯಾಣಿಸುತ್ತಿರುವ ಶಾಸಕರು. ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಹ ಇದ್ದಾರೆ – ಪಿಟಿಐ ಚಿತ್ರ
ರಾಂಚಿ ವಿಮಾನ ನಿಲ್ದಾಣದತ್ತ ಪ್ರಯಾಣಿಸುತ್ತಿರುವ ಶಾಸಕರು. ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಹ ಇದ್ದಾರೆ – ಪಿಟಿಐ ಚಿತ್ರ   

ರಾಂಚಿ: ಜಾರ್ಖಂಡ್‌ನಲ್ಲಿ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿರುವ ಮಧ್ಯೆ ಯುಪಿಎ ಮೈತ್ರಿಕೂಟ ಶಾಸಕರನ್ನು ಛತ್ತೀಸ್‌ಗಡಕ್ಕೆ ಕರೆದೊಯ್ಯಲು ಮುಂದಾಗಿದೆ.

ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂಬ ಆರೋಪಗಳ ಬೆನ್ನಲ್ಲೇ ಯುಪಿಎ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದಿಂದ ಎರಡು ಬಸ್ಸುಗಳಲ್ಲಿ ಶಾಸಕರು ರಾಂಚಿ ವಿಮಾನ ನಿಲ್ದಾಣದತ್ತ ಪ್ರಯಾಣಿಸಿದ್ದಾರೆ. ಅಲ್ಲಿಂದ ಅವರಿಗೆ ರಾಯ್‌ಪುರಕ್ಕೆ ವಿಮಾನ ಕಾಯ್ದಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೊರೇನ್ ಸಹ ಬಸ್ಸೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ADVERTISEMENT

ಛತ್ತೀಸ್‌ಗಡದ ರಾಯ್‌ಪುರದಲ್ಲಿರುವ ರೆಸಾರ್ಟೊಂದಕ್ಕೆ ಶಾಸಕರನ್ನು ಕರೆದೊಯ್ಯುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮಾದರಿಯಲ್ಲಿ ಸೊರೇನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹಾಗೂ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಜಾರ್ಖಂಡ್ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿ ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಭಾನುವಾರ ಸರಣಿ ಸಭೆ ನಡೆಸಿದ್ದವು. ಸಿಎಂ ಸದಸ್ಯತ್ವಕ್ಕೆ ಸಂಬಂಧಿಸಿದ ನಿರ್ಧಾರವನ್ನು ಘೋಷಿಸಲು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯಪಾಲರು ಕುದುರೆ ವ್ಯಾಪಾರವನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಯುಪಿಎ ಆರೋಪಿಸಿತ್ತು.

ಹೇಮಂತ್‌ ಸೊರೇನ್‌ ಅವರು ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗಣಿಗಾರಿಕೆ ಗುತ್ತಿಗೆ ನವೀಕರಣದಲ್ಲಿ ಮಾಡಿದ ಅಕ್ರಮದ ಕಾರಣಕ್ಕೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಜಾರ್ಖಂಡರ್ ರಾಜ್ಯಪಾಲರಿಗೆ ಪತ್ರ ಬರೆದಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ನಂತರ ಅಲ್ಲಿನ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.