ಸಾಂದರ್ಭಿಕ-ಚಿತ್ರ
– ಎ.ಐ ಚಿತ್ರ
ರಾಂಚಿ: ಭಾರಿ ಮಳೆಯಿಂದಾಗಿ ಜಾರ್ಖಂಡ್ನ ರಾಂಚಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡವೊಂದರ ಪಾರ್ಶ್ವದ ಛಾವಣಿ ಕುಸಿದು ಓರ್ವ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿದ್ದಾಗಿ ಪೊಲೀಸರು ಮಾಹಿತಿ ಶುಕ್ರವಾರ ನೀಡಿದ್ದಾರೆ.
ಬೆಳಿಗ್ಗೆ ಸುಮಾರು 7.30ರ ವೇಳೆಗೆ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಪಿಸ್ಕ ಮೊರೆ ಪ್ರದೇಶದ ತಂಗ್ರಾ ತೋಲಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಸರ್ಕಾರಿ ಶಾಲಾ ಕಟ್ಟಡದ ಛಾವಣಿ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಮ್ಮ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ’ ಎಂದು ಸುಖೇದೊ ನಗರ ಪೊಲೀಸ್ ಠಾಣೆ ಉಸ್ತುವಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.
ರಾಟು ನಿವಾಸಿ, ಸಹಾಯಕ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸೂರಜ್ ಭಾಟಿಯಾ (65) ಮೃತ ವ್ಯಕ್ತಿ. ಛಾವಣಿ ಕುಸಿತ ವೇಳೆ ಜಗುಲಿಯಲ್ಲಿ ಮಲಗಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮನೀಶ್ ಟಿರ್ಕೆ, ಪ್ರೀತಮ್ ಟಿರ್ಕೆ ಹಾಗೂ ಮೋಟು ಒರೋನ್ ಗಾಯಗೊಂಡವರು. ಈ ಮೂವರೂ 18–19ವರ್ಷದವರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಲೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಾಜರಾತಿ ಕಡಿಮೆ ಇದ್ದ ಕಾರಣ ಶಾಲೆಯನ್ನು ಮುಚ್ಚಲಾಗದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಾರ್ಖಂಡ್ನಲ್ಲಿ ಭಾರಿ ಮಳೆಯಾಗುತ್ತಿದೆ. ಜೂನ್ 1 ರಿಂದ ಜುಲೈ 16ರವರೆಗೆ ವಾಡಿಕೆಗಿಂತ ಶೇ 71 ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.