ನವದೆಹಲಿ: ಸಂಸ್ಥೆಯ ಆವರಣದಲ್ಲಿ ಯಾವುದೇ ರೀತಿಯ ಹಿಂಸೆಯನ್ನು ಸಹಿಸಿಕೊಳ್ಳುವುದಿಲ್ಲ ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಆಡಳಿತವು ಸೋಮವಾರ ಹೇಳಿದೆ. ವಿ.ವಿಯ ಶಾಂತಿ ಮತ್ತು ಸಾಮರಸ್ಯವನ್ನು ಹಾಳು ಮಾಡುವ ಘಟನೆಯಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.
ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್ನಲ್ಲಿ ಭಾನುವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಹಾಸ್ಟೆಲ್ನಲ್ಲಿ ರಾಮನವಮಿ ದಿನ ಮಾಂಸಾಹಾರ ಪೂರೈಕೆಗೆ ಸಂಬಂಧಿಸಿ ಈ ಸಂಘರ್ಷ ಏರ್ಪಟ್ಟಿತ್ತು. ಪ್ರಕರಣ ದಾಖಲು:ಎಬಿವಿಪಿಯ ಸದಸ್ಯರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ಎ) ಸದಸ್ಯರು ಎಬಿವಿಪಿ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ ಮನೋಜ್ ಸಿ. ತಿಳಿಸಿದ್ದಾರೆ. ದೂರು ನೀಡುವುದಾಗಿ ಎಬಿವಿಪಿ ಸದಸ್ಯರೂ ಹೇಳಿದ್ದಾರೆ. ಆ ದೂರಿನ ಬಳಿಕ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.