ನವದೆಹಲಿ: ನಿವೃತ್ತ ಐಎಎಸ್ ಅಧಿಕಾರಿ ಹರೀಶ್ ಗೌಡ ಅವರ ಬಗ್ಗೆ ಅವಹೇಳನಕಾರಿಯಾಗಿ ವರದಿ ಪ್ರಕಟಿಸಿದ್ದಕ್ಕಾಗಿ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ‘ಪಾರಿವಾಳ’ ಪತ್ರಿಕೆಯ ಸಂಪಾದಕ ಅತ್ತಿಗುಪ್ಪೆ ರವಿಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಹಾಗೂ ಪಿ.ಎಸ್.ನರಸಿಂಹ ಅವರಿದ್ದ ಪೀಠವು, ರವಿಕುಮಾರ್ ಅವರ ಮನವಿಯನ್ನು ತಿರಸ್ಕರಿಸಿತು.
ಪಿಯು ಶಿಕ್ಷಣ ಇಲಾಖೆಯ ನಿರ್ದೇಶಕರಾಗಿದ್ದ ಹರೀಶ್ ಗೌಡ ಅವರ ಬಗ್ಗೆ 2000ರಲ್ಲಿ ವರದಿ ಪ್ರಕಟವಾಗಿತ್ತು. ಅದನ್ನು ಪ್ರಶ್ನಿಸಿ ಹರೀಶ್ಗೌಡರು ನ್ಯಾಯಾಲಯಕ್ಕೆ ಖಾಸಗಿ ಮೊಕದ್ದಮೆ ಹೂಡಿದ್ದರು. ನ್ಯಾಯಾಲಯ 2002ರಲ್ಲಿ ರವಿಕುಮಾರ್ ಅವರಿಗೆ 1 ವರ್ಷ 2 ತಿಂಗಳು ಜೈಲು ಶಿಕ್ಷೆ ವಿಧಿಸಿತ್ತು.
ತೀರ್ಪು ಮರುಪರಿಶೀಲಿಸಲು ಕೋರಿ ರವಿಕುಮಾರ್, ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ಸಿಎಂಎಂ ನ್ಯಾಯಾಲಯದಲ್ಲೇ ಮೇಲ್ಮನವಿ ಸಲ್ಲಿಸಲು ಸೂಚಿಸಿತ್ತು. ನಂತರ ರವಿಕುಮಾರ್, 5ನೇ ಎಸಿಎಂಎಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ 9 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ 6 ತಿಂಗಳಿಗೆ ಕಡಿತಗೊಳಿಸಿತ್ತು. ಪೊಲೀಸರು ರವಿಕುಮಾರ್ ಅವರನ್ನು ಇತ್ತೀಚೆಗೆ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇದನ್ನು ಪ್ರಶ್ನಿಸಿ ಆರೋಪಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.