ನವದೆಹಲಿ: 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿ(ಯು) ಮತ್ತು ಎಲ್ಜೆಪಿ ಒಗ್ಗಟ್ಟಿನಿಂದ ಹೋರಾಟ ನಡೆಸಿ ಜಯ ಸಾಧಿಸುತ್ತವೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾನುವಾರ ಬಿಹಾರ ಬಿಜೆಪಿ ಘಟಕದ ಕಾರ್ಯಸಮಿತಿಯ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ’ ಎಂದು ಹೇಳಿದ್ದಾರೆ.
‘ಬಿಹಾರ ಮತ್ತು ಇತರ ರಾಜ್ಯಗಳಲ್ಲಿ ವಿರೋಧ ಪಕ್ಷಗಳು ಯಾವುದೇ ರೀತಿಯ ಪ್ರಭಾವ ಹೊಂದಿಲ್ಲ. ಮತದಾರರು ಬಿಜೆಪಿ ಮೇಲೆ ಮಾತ್ರ ಅಪಾರ ಆಶಾಭಾವ ಹೊಂದಿದ್ದಾರೆ’ ಎಂದು ಹೇಳಿದ್ದಾರೆ.
‘ವಿರೋಧ ಪಕ್ಷಗಳಿಗೆ ಯಾವುದೇ ಸಿದ್ಧಾಂತವೂ ಇಲ್ಲ, ದೂರದೃಷ್ಟಿಯೂ ಇಲ್ಲ. ಕೀಳುಮಟ್ಟದ ರಾಜಕೀಯದಲ್ಲಿ ವಿರೋಧ ಪಕ್ಷಗಳು ತೊಡಗಿವೆ’ ಎಂದು ಟೀಕಿಸಿದ್ದಾರೆ.
‘ಬಿಹಾರದಲ್ಲಿ ಪ್ರವಾಹ ಮತ್ತು ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ನಿಯಂತ್ರಿಸುವಲ್ಲಿ ಬಿಹಾರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ವಿಶೇಷ ಪ್ಯಾಕೇಜ್ ಅನ್ನು ಸಹ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.