ADVERTISEMENT

JP ಸೇನಾನಿಗಳ ಪಿಂಚಣಿ ದ್ವಿಗುಣ: ಹಲವು ಪ್ರಸ್ತಾವನೆಗಳಿಗೆ ಬಿಹಾರ ಸರ್ಕಾರ ಅನುಮೋದನೆ

ಪಿಟಿಐ
Published 14 ಆಗಸ್ಟ್ 2025, 2:43 IST
Last Updated 14 ಆಗಸ್ಟ್ 2025, 2:43 IST
ನಿತೀಶ್ ಕುಮಾರ್
ನಿತೀಶ್ ಕುಮಾರ್   

ಪಟ್ನಾ: 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಳವಳಿಯನ್ನು ಬೆಂಬಲಿಸಿದ್ದಕ್ಕಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದ ರಾಜಕೀಯ ಕಾರ್ಯಕರ್ತರಾದ ‘ಜೆ.ಪಿ ಸೇನಾನಿ'ಗಳಿಗೆ ಪಿಂಚಣಿ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆಗೂ ಮುನ್ನ 1974ರಲ್ಲಿ ಆರಂಭವಾದ ‘ಜೆಪಿ ಚಳುವಳಿ’ಯಲ್ಲಿ ನಿತೀಶ್ ಕುಮಾರ್ ಅವರು ಸಕ್ರಿಯರಾಗಿ ಭಾಗವಹಿಸಿದ್ದರು.

‘ಆರು ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ‘ಜೆಪಿ ಸೇನಾನಿ’ಗಳ ಪಿಂಚಣಿಯನ್ನು ₹15,000ದಿಂದ ₹30,000ಕ್ಕೆ ಹೆಚ್ಚಿಸಲಾಗಿದೆ. ಕಡಿಮೆ ಅವಧಿಯ ಜೈಲು ಶಿಕ್ಷೆ ಅನುಭವಿಸಿದವರ ಪಿಂಚಣಿಯನ್ನು ₹7,500ದಿಂದ ₹15,000ಕ್ಕೆ ಹೆಚ್ಚಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಬಿಹಾರದಲ್ಲಿ ಒಟ್ಟು 3,354 ‘ಜೆಪಿ ಸೇನಾನಿ’ಗಳು ಪ್ರಸ್ತುತ ಈ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದಾರೆ ಎಂದ ಅವರು ಮಾಹಿತಿ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಈಚೆಗೆ ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದರು.

ಗೃಹ ಬಳಕೆದಾರರಿಗೆ ‍ಪ್ರತಿ ತಿಂಗಳು 125 ಯೂನಿಟ್‌ ವರೆಗಿನ ಉಚಿತ ವಿದ್ಯುತ್‌ ವಿತರಿಸುವ ಪ್ರಸ್ತಾಪಕ್ಕೆ ಬಿಹಾರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಆಗಸ್ಟ್‌ 1ರಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದೂ ಸರ್ಕಾರ ತಿಳಿಸಿತ್ತು.

ಜುಲೈ 18ರಂದು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ₹7,200 ಕೋಟಿಗೂ ಹೆಚ್ಚು ಮೊತ್ತದ ರೈಲು, ಮೀನುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಯೋಜನೆಗಳಿಗೆ ಚಾಲನೆ ನೀಡಿದ್ದರು.

2009ರಲ್ಲಿ ನಿತೀಶ್‌ ಕುಮಾರ್‌ ಅವರು ಜಯಪ್ರಕಾಶ್ ನಾರಾಯಣ್ ಅವರ ಹೆಸರಿನ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದರು. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಕೂಡ ಈ ಯೋಜನೆಯ ಫಲಾನುಭವಿಗಳಲ್ಲಿ ಒಬ್ಬರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.