ಸೊಯಾತ್ಕಲನ್ (ಮಧ್ಯಪ್ರದೇಶ): ಧರ್ಮ, ಅಧ್ಯಾತ್ಮದ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಹೆಚ್ಚಿನ ಜ್ಞಾನವಿದ್ದು, ಅವರೊಂದಿಗೆ ಚರ್ಚೆ ನಡೆಸುವಂತೆ ಬಿಜೆಪಿ, ಆರ್ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ ನಾಯಕರಿಗೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಭಾನುವಾರ ಸವಾಲು ಹಾಕಿದ್ದಾರೆ.
ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿರುವ ಸೊಯಾತ್ಕಲನ್ನಲ್ಲಿ ನಡೆಯುತ್ತಿದ್ದ ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ಇತ್ತಿಚೆಗೆ ಅಧ್ಯಾತ್ಮದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಮಲ್ ನಾಥ್ ಅವರು, ಅಧ್ಯಾತ್ಮ, ಧರ್ಮದ ಕುರಿತು ಮಾಧ್ಯಮದವರ ಎದುರೇ ಬಿಜೆಪಿ, ಆರ್ಎಸ್ಎಸ್ ಮತ್ತು ವಿಎಚ್ಪಿ ನಾಯಕರೊಂದಿಗೆ ಚರ್ಚೆ ನಡೆಯಲಿ. ಈ ಚರ್ಚೆಯಲ್ಲಿ ರಾಹುಲ್ ಗಾಂಧಿ ಅವರಿಗೇ ಹೆಚ್ಚಿನ ಜ್ಞಾನ ಇದೆ ಎಂದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ.
ಭಾರತ್ ಜೋಡೊ ಯಾತ್ರೆಯ ಮುಖ್ಯ ಉದ್ದೇಶವೇ ದೇಶದ ಸಂಸ್ಕೃತಿ ಹಾಗೂ ಸಂವಿಧಾನದ ರಕ್ಷಣೆಯಾಗಿದೆ.ರಾಹುಲ್ ಗಾಂಧಿ ಅವರು ಪೂರ್ವದಿಂದ ಪಶ್ಚಿಮಕ್ಕೆ ಮತ್ತೊಂದು ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಕಳೆದ 8 ವರ್ಷಗಳಿಂದ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿರಾಹುಲ್ ಗಾಂಧಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ. ಕೇರಳದಲ್ಲಿ ಯಾತ್ರೆ ಕೊನೆಗೊಳ್ಳುತ್ತದೆ ಎಂದು ಬಿಜೆಪಿ ಲೇವಡಿ ಮಾಡಿತ್ತು. ಆದರೆ ಯಾತ್ರೆ ಇಂದು ಯಶಸ್ವಿಯಾಗಿ ನಡೆಯುತ್ತಿದೆ. ಮಧ್ಯಪ್ರದೇಶದಲ್ಲಿ ಯಾತ್ರೆ ಯಶಸ್ವಿಯಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.