ನವದೆಹಲಿ: ಅಸ್ಸಾಂನಲ್ಲಿ ಸಂಭವಿಸಿದ ಹಿಂಸಾಚಾರದ ಕುರಿತು ಕೋರ್ಟ್ಗಳು ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಒತ್ತಾಯಿಸಿದ್ದಾರೆ.
ಅಸ್ಸಾಂ ಹಿಂಸಾಕೃತ್ಯದ ಚಿತ್ರಗಳನ್ನು ಸಾಮಾಜಿಕ ತಾಣಗಳಲ್ಲಿ ನೋಡಿ ನಡುಗಿ ಹೋಗಿದ್ದೇನೆ. ಪ್ರತಿರೋಧ ತೋರಿದವರ ಮೇಲೆ ನಡೆದಿರುವ ಅಮಾನುಷ ದೌರ್ಜನ್ಯವು ನನ್ನನ್ನು ವಿಚಲಿತನನ್ನಾಗಿಸಿದೆ. ಈ ಬಗ್ಗೆ ಸರ್ಕಾರ ಮೌನವಾಗಿರುವುದನ್ನು ನೋಡಿ ಹತಾಶೆಯಾಗಿದೆ ಎಂದು ಕಪಿಲ್ ಸಿಬಲ್ ಬೇಸರ ವ್ಯಕ್ತಪಡಿಸಿದ್ದಾರೆ.
ವಿಚಾರಣೆ ಬಗ್ಗೆ ಉತ್ತರವಿಲ್ಲ. ನ್ಯಾಯಾಲಯವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಸಿಬಲ್ ಹೇಳಿದರು.
ದರಂಗ್ ಜಿಲ್ಲೆಯಲ್ಲಿ ಅಸ್ಸಾಂ ಸರ್ಕಾರ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ಕೈಗೊಂಡಿದ್ದು, ಗುರುವಾರ ಭೂಮಿ ಕಬಳಿಸಿದ್ದಾರೆ ಎನ್ನಲಾದ ಸ್ಥಳೀಯರು ಮತ್ತು ಪೊಲೀಸರ ನಡುವೆ ಸಂಘರ್ಷವು ಹಿಂಸಾತ್ಮಕ ತಿರುವು ಕಂಡಿತ್ತು. ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇದೇ ವೇಳೆ ಎದೆಗೆ ಗುಂಡೇಟು ತಗುಲಿ ಬಿದ್ದಿದ್ದ ವ್ಯಕ್ತಿಯ ಮೇಲೆ ಛಾಯಾಗ್ರಾಹಕನೊಬ್ಬ ಹಾರಿ, ನೆಗೆದು ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಭಾರಿ ವಿರೋಧಕ್ಕೆ ಕಾರಣವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.