ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್ಕ್ಲೇವ್ ಪ್ರದೇಶದಲ್ಲಿರುವ ಕರ್ನಾಟಕ ಭವನದ ಹೊಸ ಕಟ್ಟಡ ‘ಕಾವೇರಿ’ಯ ಉದ್ಘಾಟನೆ ಏ. 2ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿದ್ದಾರೆ.
ಇದೇ ಜಾಗದಲ್ಲಿದ್ದ 50 ವರ್ಷಗಳ ಹಿಂದಿನ ಕಟ್ಟಡ ಸುರಕ್ಷಿತವಲ್ಲ ಎಂದು ದೆಹಲಿ ಮಹಾನಗರ ಪಾಲಿಕೆಯು ಹೇಳಿತ್ತು. ಇದರ ಬೆನ್ನಲ್ಲೇ 2019ರಲ್ಲಿ ನೂತನ ಯೋಜನೆಗೆ ಅನುಮೋದನೆ ದೊರೆಯಿತು. ಒಟ್ಟು ₹140 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಇಲ್ಲಿ ಹೊಸ ಕಟ್ಟಡ ನಿರ್ಮಿಸಿದೆ.
ನೂತನ ಭವನದಲ್ಲಿ ರಾಜ್ಯಪಾಲರಿಗೆ ವಿಶೇಷ ಸ್ವೀಟ್ ಕೊಠಡಿ. ಮುಖ್ಯಮಂತ್ರಿ ಮತ್ತು ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಅತಿ ಗಣ್ಯ ವ್ಯಕ್ತಿಗಳಿಗೆ ಪ್ರತ್ಯೇಕ ವಿಶೇಷ ಕೊಠಡಿಗಳನ್ನು ನಿರ್ಮಿಸಲಾಗಿದೆ.
‘ಕಾವೇರಿ’ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾದ ಎಚ್.ಸಿ.ಮಹಾದೇವಪ್ಪ ಹಾಗೂ ಸತೀಶ್ ಜಾರಕಿಹೊಳಿ ಪಾಲ್ಗೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.