ADVERTISEMENT

ಸಚಿವ ಸಂಪುಟದ‌ ವಿಸ್ತರಣೆ: ಬಸವರಾಜ ಬೊಮ್ಮಾಯಿ‌- ಜೆ.ಪಿ. ನಡ್ಡಾ ಸಭೆ‌ ಸಂಜೆ‌ ನಿಗದಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 7:31 IST
Last Updated 6 ಏಪ್ರಿಲ್ 2022, 7:31 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. ಸಚಿವರಾದ‌ ಗೋವಿಂದ ಕಾರಜೋಳ, ವಿ.ಸುನೀಲಕುಮಾರ್ ಚಿತ್ರದಲ್ಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. ಸಚಿವರಾದ‌ ಗೋವಿಂದ ಕಾರಜೋಳ, ವಿ.ಸುನೀಲಕುಮಾರ್ ಚಿತ್ರದಲ್ಲಿದ್ದಾರೆ.   

ನವದೆಹಲಿ: ರಾಜ್ಯ ಸಚಿವ ಸಂಪುಟದ‌ ವಿಸ್ತರಣೆ ಅಥವಾ ಪುನರ್ ರಚನೆ‌ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ‌ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಭೆ ಬುಧವಾರ ಸಂಜೆ‌ ನಿಗದಿಯಾಗಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ನಡೆದ ಪಕ್ಷದ‌ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ಸಂದರ್ಭ ಸಭೆಯ ಸಮಯ ನಿಗದಿಯಾಗಿದೆ. ಸಂಪುಟದ‌ ಕುರಿತು ನಡ್ಡಾ ಅವರೊಂದಿಗಿನ ಸಭೆಯ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮನವಿ ಸಲ್ಲಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವನ್ನು ಕೂಡಲೇ ಬಿಡುಗಡೆ ಮಾಡುವಂತೆ‌ ಕೋರಲಾಗಿದೆ. ಜಿಎಸ್ ಟಿ ಸಭೆಯ ಕುರಿತೂ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ರಾಜ್ಯದ ರಾಯಚೂರಿನಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. ಈ‌ ಸಂಬಂಧ ಅಗತ್ಯ ಅನುದಾನ ಒದಗಿಸುವಂತೆಯೂ ಆಗ್ರಹಿಸಲಾಯಿತು ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬುಧವಾರ ಬೆಳಿಗ್ಗೆ ನಡೆದಿರುವ ಯುವಕನೊಬ್ಬನ ಕೊಲೆ‌ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಬೊಮ್ಮಾಯಿ ನಿರಾಕರಿಸಿದರು.

ಸಚಿವರಾದ ಗೋವಿಂದ ಕಾರಜೋಳ, ವಿ.ಸುನೀಲಕುಮಾರ್ ಈ ಸಂದರ್ಭ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.