ADVERTISEMENT

ಕರ್ನಾಟಕ–ಮಹಾ ಗಡಿಯನ್ನು ಕೇಂದ್ರಾಡಳಿತ ಪ್ರದೇಶವಾಗಿಸಲು ‘ಸುಪ್ರೀಂ’ ಮಾರ್ಗ: ಉದ್ಧವ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2022, 11:15 IST
Last Updated 27 ಡಿಸೆಂಬರ್ 2022, 11:15 IST
   

ಮುಂಬೈ: ‘ಬೆಳಗಾವಿ ಸೇರಿಂದಂತೆ ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿಸಲು ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಅಗತ್ಯವಿದೆ’ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ಮತ್ತು 865 ಮರಾಠಿ ಭಾಷಿಕ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಕಾನೂನಾತ್ಮ ಹೋರಾಟ ನಡೆಸುವ ನಿರ್ಣಯವನ್ನು ಅಲ್ಲಿನ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ವಿಧಾನಸಭೆ ಕಲಾಪದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಉದ್ಧವ ಠಾಕ್ರೆ, ‘ನಾವು ಇಂದಿನ ನಿರ್ಣಯವನ್ನು ಬೆಂಬಲಿಸಿದ್ದೇವೆ. ಮಹಾರಾಷ್ಟ್ರದ ಪರವಾಗಿ ಏನೇ ಆದರೂ ನಾವು ಅದರ ಪರ ನಿಲ್ಲುತ್ತೇವೆ. ಆದರೆ ಇಲ್ಲಿ ಕೆಲವು ಪ್ರಶ್ನೆಗಳಿವೆ. ಗಡಿ ಪ್ರದೇಶಗಳಲ್ಲಿರುವ ಜನರು ತಮ್ಮ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು 2 ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ನಾವೇನು ಮಾಡುತ್ತಿದ್ದೇವೆ? ಎಂದು ಅವರು ಪ್ರಶ್ನೆ ಮಾಡಿದರು.

ADVERTISEMENT

‘ಕರ್ನಾಟಕದಲ್ಲಿರುವ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಅದಕ್ಕೆ, 2008ರ ಸುಪ್ರೀಂ ಕೋರ್ಟ್‌ ಆದೇಶವನ್ನು ಮುಂದಿಟ್ಟಿದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಕರ್ನಾಟಕ ಸರ್ಕಾರ ಏನನ್ನೂ ಪಾಲಿಸುತ್ತಿಲ್ಲ. ಅವರು ಅಲ್ಲಿ ವಿಧಾನಸಭೆ ಅಧಿವೇಶನ ನಡೆಸುತ್ತಿದ್ದಾರೆ. ಜಿಲ್ಲೆಗೆ ಬೆಳಗಾವಿ ಎಂದು ಮರುನಾಮಕರಣ ಮಾಡಿದ್ದಾರೆ. ಆದ್ದರಿಂದ ನಾವು ಸುಪ್ರೀಂ ಕೋರ್ಟ್‌ಗೆ ಮತ್ತೆ ಹೋಗಬೇಕು ಮತ್ತು ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಬೇಕು’ ಎಂದು ಸರ್ಕಾರವನ್ನು ಉದ್ಧವ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.