ಕರ್ತವ್ಯ ಭವನ
-ಪಿಟಿಐ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಬುಧವಾರ) ದೆಹಲಿಯ ಕರ್ತವ್ಯ ಪಥದಲ್ಲಿ ‘ಕರ್ತವ್ಯ ಭವನ’ವನ್ನು ಉದ್ಘಾಟಿಸಲಿದ್ದಾರೆ.
ನರೇಂದ್ರ ಮೋದಿ ಅವರು ಸಂಜೆ 6.30ಕ್ಕೆ ನೂತನ ಕರ್ತವ್ಯ ಭವನವನ್ನು ಉದ್ಘಾಟಿಸಲಿದ್ದು, ನವದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಂದ್ರ ಪ್ರಸಾದ್ ರಸ್ತೆ, ಮೌಲಾನಾ ಆಜಾದ್ ರಸ್ತೆ, ಮಾನ್ ಸಿಂಗ್ ರಸ್ತೆ, ಜನಪಥ, ಸಂಸದ್ ಮಾರ್ಗ, ಮೋತಿಲಾಲ್ ನೆಹರು ಮಾರ್ಗ ಮತ್ತು ಸಿ-ಹೆಕ್ಸಾಗನ್ ಸುತ್ತಮುತ್ತ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ಡಿಸಿಪಿ (ಸಂಚಾರ) ರಾಜೀವ್ ಕುಮಾರ್ ತಿಳಿಸಿದ್ದಾರೆ.
ದೆಹಲಿಯಾದ್ಯಂತ ಇರುವ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಒಟ್ಟುಗೂಡಿಸುವ ಮೂಲಕ ದಕ್ಷತೆ, ನಾವೀನ್ಯತೆ ಮತ್ತು ಸಹಯೋಗವನ್ನು ಬೆಳೆಸಲು ಕರ್ತವ್ಯ ಭವನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ತವ್ಯ ಭವನದಲ್ಲಿ ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ಸಚಿವಾಲಯ (ಎಂಎಸ್ಎಂಇ), ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಗಳು ಮತ್ತು ಇಲಾಖೆಗಳು ಇರಲಿವೆ ಎಂದು ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.