
ವಿಜಯ್
(ಪಿಟಿಐ ಚಿತ್ರ)
ನವದೆಹಲಿ/ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಎದುರು ಇಂದು (ಸೋಮವಾರ) ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಪ್ಪು ಬಣ್ಣದ ರೇಂಜ್ ರೋವರ್ ಕಾರಲ್ಲಿ ಸಿಬಿಐ ಕಚೇರಿಯನ್ನು ವಿಜಯ್ ತಲುಪಿದರು. ಬಳಿಕ ಅವರನ್ನು ಏಜೆನ್ಸಿಯ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ಕರೆದೊಯ್ಯಲಾಯಿತು.
2025ರ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ನಟ-ರಾಜಕಾರಣಿಯ ಬೆಂಬಲಿಗರು ಭಾರಿ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದ್ದರಿಂದ ಸಿಬಿಐ ಕಚೇರಿಯ ಹೊರಗಡೆ ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಭಾರಿ ಭದ್ರತೆ ಏರ್ಪಡಿಸಿತ್ತು. ವಿಜಯ್ ಅಭಿಮಾನಿಗಳು ನಟನಿಗೆ ಜೈಕಾರ ಕೂಗಿದರು.
ಚೆನ್ನೈಯಿಂದ ಇಂದು ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಚಾರ್ಟರ್ಡ್ ವಿಮಾನದಲ್ಲಿ ವಿಜಯ್ ದೆಹಲಿಗೆ ಪ್ರಯಾಣ ಬೆಳೆಸಿದರು ಎಂದು ಮೂಲಗಳು ತಿಳಿಸಿವೆ.
ಕಾಲ್ತುಳಿತ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಟಿವಿಕೆ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ.
ಈ ಪ್ರಕರಣದ ತನಿಖೆಯನ್ನು ತಮಿಳುನಾಡು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿತ್ತು. ಸುಪ್ರೀಂ ಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ದೋಷಾರೋಪ ಸಲ್ಲಿಕೆಗೂ ಮುನ್ನ ವಿಜಯ್ ವಿಚಾರಣೆಗೆ ಸಿಬಿಐ ನಿರ್ಧರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.