ಕರೂರು ಕಾಲ್ತುಳಿತ ಹಾಗೂ ನಟ ವಿಜಯ್
–ಪಿಟಿಐ ಚಿತ್ರ
ನವದೆಹಲಿ: ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಸಾವಿಗೀಡಾದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂದಕ್ಕೆ ಪಡೆದು ಮದ್ರಾಸ್ ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ತನಿಖೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ತಮಿಳುನಾಡು ಸರ್ಕಾರವು ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ.
‘ಸ್ಥಳೀಯ ಪೊಲೀಸರು ಹಾಗೂ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಂಪೂರ್ಣವಾಗಿ ಸಮರ್ಥರಾಗಿದ್ದಾರೆ. ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲಿದ್ದಾರೆ. ಸಿಬಿಐ ಮಧ್ಯಪ್ರವೇಶಿಸಲು ಯಾವುದೇ ಅಸಾಧಾರಣ ಪರಿಸ್ಥಿತಿ ಸೃಷ್ಟಿಯಾಗಿಲ್ಲ’ ಎಂದು ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ.
ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾದ ಬಳಿಕ ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿತ್ತು.
ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ, ಖ್ಯಾತ ನಟ ವಿಜಯ್ ಅವರು ಭಾಗವಹಿಸಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.