ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ನಾಲ್ಕು ಎನ್ಕೌಂಟರ್ಗಳಿಂದಾಗಿ, ಭಯೋತ್ಪಾದಕರು ಅಂತರರಾಷ್ಟ್ರೀಯ ಗಡಿ (ಐಬಿ) ದಾಟಿ ಭಾರತಕ್ಕೆ ನುಸುಳುತ್ತಿದ್ದ ಮಾರ್ಗ ಗುರುತಿಸಲಾಗಿದೆ ಎಂದು ಕಠುವಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಭಿತ್ ಸಕ್ಸೇನಾ ತಿಳಿಸಿದ್ದಾರೆ.
ಈ ಮಾರ್ಗವನ್ನು ಮತ್ತೆ ಯಾರಿಗೂ ಬಳಸಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಈ ಎನ್ಕೌಂಟರ್ಗಳ ಬಳಿಕ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇದು ಉಗ್ರರು ಯೋಜಿಸಿದ್ದ ದೊಡ್ಡ ಯೋಜನೆಯನ್ನು ವಿಫಲಗೊಳಿಸಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದಕರಿಗೆ ಸಹಕಾರ ನೀಡುತ್ತಿದ್ದ 30 ಜನರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.
ಮಾರ್ಚ್ 27ರ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದರು. ತಪ್ಪಿಸಿಕೊಂಡಿರುವ ಕೆಲ ಭಯೋತ್ಪಾದಕರ ಶೋಧಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.