ನಾಗ್ಪುರ: ರಾಷ್ಟ್ರಮಟ್ಟದಲ್ಲಿಬಿಜೆಪಿ ವಿರುದ್ಧ ಎಲ್ಲ ಪಕ್ಷಗಳನ್ನು ಒಟ್ಟುಗೂಡಿಸಿ ಮುನ್ನಡೆಸುವ ಸಾಮರ್ಥ್ಯತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಇದೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಸೋಮವಾರ ತಿಳಿಸಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಚಂದ್ರಶೇಖರ್ ರಾವ್ ಅವರು ಭಾನುವಾರಷ್ಟೇ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅದರ ಬೆನ್ನಲ್ಲೇ ರಾವುತ್ ಅವರು ಈ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಾಣುತ್ತದೆ ಎಂದರು.
ತೆಲಂಗಾಣ ಮುಖ್ಯಮಂತ್ರಿಯನ್ನು ಹೊಗಳಿದ ರಾವುತ್, ‘ಚಂದ್ರಶೇಖರ್ ರಾವ್ ಅವರು ಶ್ರಮವಹಿಸುವ ನಾಯಕರಾಗಿದ್ದಾರೆ.
ತಮ್ಮ ರಾಜಕೀಯ ಜೀವನದುದ್ದಕ್ಕೂ ಸಾಕಷ್ಟು ಹೋರಾಟಗಳನ್ನು ಮಾಡಿರುವ ಅವರು, ಎಲ್ಲರನ್ನೂ ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಭಾನುವಾರ ನಡೆದ ಸಭೆಯಲ್ಲಿ, ಉಭಯ ನಾಯಕರು ಅಭಿವೃದ್ಧಿ ಮತ್ತು ದೇಶದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ’ ಎಂದು ಅವರು ಹೇಳಿದರು.
‘ಈ ರೀತಿಯ ಪ್ರಯೋಗಗಳು ವಿಫಲವಾಗಿವೆ’:ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಇತರ ಪಕ್ಷಗಳನ್ನು ಒಗ್ಗೂಡಿಸುವ ಹಲವು ಪ್ರಯೋಗಗಳು ಈ ಹಿಂದೆಯೇ ವಿಫಲವಾಗಿವೆ ಎಂದು ಮಹಾರಾಷ್ಟ್ರದ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ದೂರಿದ್ದಾರೆ.
ಔರಂಗಾಬಾದ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ರೀತಿ ಭೇಟಿಯಾಗುವುದು ಹೊಸದೇನಲ್ಲ. ಈ ಹಿಂದೆ ನಾನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗಲೂತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನನ್ನನ್ನು ಭೇಟಿ ಮಾಡಿದ್ದರು‘ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.