ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಆದೇಶದಂತೆ ತಿಹಾರ್ ಜೈಲಿಗೆ ಸೋಮವಾರ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು
ಪಿಟಿಐ ಚಿತ್ರ
ನವದೆಹಲಿ: ದೆಹಲಿ ಅಬಕಾರಿ ನೀತಿ ರೂಪಿಸುವ ಸಂಬಂಧ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆಯಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸೋಮವಾರ ತಿಹಾರ್ ಜೈಲಿಗೆ ಕಳುಹಿಸಲಾಯಿತು.
ವೈದ್ಯಕೀಯ ಪರೀಕ್ಷೆಯ ನಂತರ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನ ಸೆಲ್ ಸಂಖ್ಯೆ 2ರಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನಗರದ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏ. 15ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ದೆಹಲಿ ರಾಜ್ಯ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ್, ‘ಅಬಕಾರಿ ನೀತಿ ಹಗರಣದಲ್ಲಿ ತಾನು ಮುಗ್ಧ ಎಂದು ಕೇಜ್ರಿವಾಲ್ ಹೇಳುತ್ತಿದ್ದಾರೆ. ಆದರೆ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದೆ. ಒಂದೊಮ್ಮೆ ಅವರಿಗೆ ರಾಜಕೀಯದ ಘನತೆ ಕುರಿತು ಕಿಂಚಿತ್ತಾದರೂ ಕಾಳಜಿ ಇದ್ದರೆ, ಜನರ ಹಾಗೂ ಸಾರ್ವಜನಿಕರ ಕೆಲಸಗಳ ಬಗ್ಗೆ ಗಮನ ಇದ್ದರೆ ತಕ್ಷಣ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ವಿಚಾರಣೆ ವೇಳೆ ದೆಹಲಿ ಸರ್ಕಾರದ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಕೇಜ್ರಿವಾಲ್ ಹೇಳಿದ್ದಾರೆ. ಆ ಮೂಲಕ ಈ ಇಬ್ಬರ ರಾಜಕೀಯ ಭವಿಷ್ಯನ್ನು ಹಾಳು ಮಾಡುವ ಉದ್ದೇಶವನ್ನು ಕೇಜ್ರಿವಾಲ್ ಹೊಂದಿದ್ದಾರೆ. ಇದರಿಂದ ತಮ್ಮ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಹುನ್ನಾರ ಅವರದ್ದಾಗಿದೆ’ ಎಂದು ಸಚ್ದೇವ್ ಆರೋಪಿಸಿದ್ದಾರೆ.
ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯವು, ‘ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅತಿಶಿ ಹಾಗೂ ಸೌರಭ್ ಅವರ ಹೆಸರನ್ನು ಕೇಜ್ರಿವಾಲ್ ಹೇಳಿದ್ದಾರೆ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.