ADVERTISEMENT

ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಭೇಟಿಯಾಗಲಿರುವ ಕೇಜ್ರಿವಾಲ್

ಪಿಟಿಐ
Published 29 ಮೇ 2023, 9:41 IST
Last Updated 29 ಮೇ 2023, 9:41 IST
ಅರವಿಂದ್‌ ಕೇಜ್ರಿವಾಲ್‌ ಮತ್ತು  ಸೀತಾರಾಂ ಯೆಚೂರಿ
ಅರವಿಂದ್‌ ಕೇಜ್ರಿವಾಲ್‌ ಮತ್ತು ಸೀತಾರಾಂ ಯೆಚೂರಿ   

ನವದೆಹಲಿ : ದೆಹಲಿ ಆಡಳಿತಾತ್ಮಕ ಸೇವೆಗಳ ಹಿಡಿತಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಿರುದ್ಧ ಹೋರಾಟ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿಪಕ್ಷ ನಾಯಕರುಗಳ ಬೆಂಬಲ ಪಡೆಯಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮಂಗಳವಾರ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನು ಭೇಟಿಯಾಗಿದ್ದಾರೆ.

ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ತಮಗೆ ಬೆಂಬಲ ನೀಡುವಂತೆ ಕೋರಿ ಅರವಿಂದ್ ಕೇಜ್ರಿವಾಲ್, ಬಿಹಾರ ಮುಖ್ಯಮಂತ್ರಿ ನಿತಿಶ್‌ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ನಾಯಕ ಉದ್ಧವ್‌ ಠಾಕ್ರೆ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಾಯಕರುಗಳು ಆಮ್‌ ಆದ್ಮಿ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದರು.

ಯೆಚೂರಿ ಅವರನ್ನು ಭೇಟಿ ಮಾಡಲಿರುವ ಬಗ್ಗೆ ಕೇಜ್ರಿವಾಲ್‌ ಇಂದು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. ‘ನಾಳೆ (ಮಂಗಳವಾರ) ಮಧ್ಯಾಹ್ನ 12.30 ಕ್ಕೆ ಸಿಪಿಎಂ ಪ್ರಧಾನ ಕಛೇರಿಯಲ್ಲಿ ಸೀತಾರಾಂ ಯೆಚೂರಿ ಅವರನ್ನು ಭೇಟಿ ಮಾಡಿ ಕೇಂದ್ರ ಹೊರಡಿಸಿರುವ ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ನಮಗೆ ಬೆಂಬಲ ನೀಡುವಂತೆ ಕೋರಲಾಗುವುದು‘ ಎಂದು ತಿಳಿಸಿದ್ದಾರೆ.

ADVERTISEMENT

ಸುಗ್ರೀವಾಜ್ಞೆ ಸಂಬಂಧ ಮಾತುಕತೆ ನಡೆಸಲು ಸಮಯ ನೀಡುವಂತೆ ಎಎಪಿ ರಾಷ್ಟ್ರೀಯ ಸಂಚಾಲಕರು, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.