ಅರವಿಂದ ಕೇಜ್ರಿವಾಲ್
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ದಿನಗಣನೆ ಆರಂಭವಾಗಿದೆ. ಈ ನಡುವೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮಧ್ಯಮ ವರ್ಗದವರಿಗಾಗಿ ಏಳು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಿದ್ದಾರೆ.
ಈ ಕುರಿತು ವಿಡಿಯೊ ಸಂದೇಶ ಬಿಡುಗಡೆ ಮಾಡಿದ ಅವರು, ಮಧ್ಯಮ ವರ್ಗವು ಭಾರತೀಯ ಆರ್ಥಿಕತೆಯ ನಿಜವಾದ ಶಕ್ತಿಯಾಗಿದೆ ಆದರೆ ದೀರ್ಘಕಾಲದಿಂದ ಅವರನ್ನು ನಿರ್ಲಕ್ಷಿಸಲಾಗಿದ್ದು, ಕೇವಲ ತೆರಿಗೆ ಸಂಗ್ರಹಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ವಿಷಾದಿಸಿದರು.
ಏಳು ಅಂಶಗಳೆಂದರೆ,
ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ಅನ್ನು ಈಗಿರುವ ಶೇ 2ರಿಂದ ಶೇ 10ಕ್ಕೆ ಏರಿಸುವುದು ಮತ್ತು ಖಾಸಗಿ ಶಾಲೆಗಳ ಶುಲ್ಕವನ್ನು ಮಿತಿಗೊಳಿಸಬೇಕು.
ಗುಣಮಟ್ಟದ ಶಿಕ್ಷಣ ಎಲ್ಲರಿಗೂ ತಲುಪುವಂತೆ ಮಾಡಲು ಉನ್ನತ ಶಿಕ್ಷಣಕ್ಕಾಗಿ ಸಹಾಯಧನ ಮತ್ತು ವಿದ್ಯಾರ್ಥಿವೇತನ ನೀಡಬೇಕು.
ಆರೋಗ್ಯ ಕ್ಷೇತ್ರ ಅಗತ್ಯತೆಯ ಬಗ್ಗೆ ಹೇಳಿದ ಅವರು, ಆರೋಗ್ಯ ವಿಮಾ ಕಂತುಗಳ ಮೇಲಿನ ತೆರಿಗೆಗಳನ್ನು ತೆಗೆದು ಹಾಕಬೇಕು. ಜತೆಗೆ ಅದರ ಜಿಡಿಪಿಯನ್ನು ಶೇ 10ಕ್ಕೆ ಏರಿಸಬೇಕು.
ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿರುವ ಕಾರಣ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ₹7 ಲಕ್ಷದಿಂದ ₹10 ಲಕ್ಷಕ್ಕೆ ಹೆಚ್ಚಿಸಬೇಕು.
ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ತೆಗೆದುಹಾಕಬೇಕು
ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ಸೇರಿದಂತೆ ವಿವಿಧ ನಿವೃತ್ತಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಪ್ರಸ್ತಾಪಿಸಿದರು.
ಇತ್ತೀಚಿನ ವರ್ಷಗಳಲ್ಲಿ ಸ್ಥಗಿತಗೊಂಡಿರುವ ಹಿರಿಯ ನಾಗರಿಕರಿಗೆ ರೈಲು ಪ್ರಯಾಣ ದರದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೆ ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಎಎಪಿ ಸಂಸದರು ಮುಂಬರುವ ಸಂಸತ್ತಿನ ಅಧಿವೇಶನಗಳಲ್ಲಿ ಮಧ್ಯಮ ವರ್ಗದ ಪರ ಧ್ವನಿ ಎತ್ತುತ್ತಾರೆ, ಅವರ ಸಮಸ್ಯೆಗಳನ್ನು ರಾಜಕೀಯ ಭಾಷಣದ ಕೇಂದ್ರಬಿಂದುವನ್ನಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡುತ್ತಾರೆ ಎಂದು ಇದೇ ವೇಳೆ ಅವರು ವಾಗ್ದಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.