ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪರಿಸ್ಥಿತಿ ‘ಗಂಭೀರವಾಗಿದೆ’ ಎಂದು ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕೋವಿಡ್ ಪೀಡಿತರ ಚಿಕಿತ್ಸೆಗಾಗಿ ಹಾಸಿಗೆ, ಆಮ್ಲಜನಕ ಸೌಲಭ್ಯಕ್ಕಾಗಿ ಅಗತ್ಯ ನೆರವು ಒದಗಿಸಬೇಕು ಎಂದು ಕೋರಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಪೀಡಿತರ ಚಿಕಿತ್ಸೆಗಾಗಿಯೇ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಆಸ್ಪತ್ರೆಗಳಲ್ಲಿ ಕನಿಷ್ಠ 7000 ಹಾಸಿಗೆಗಳನ್ನು ಮೀಸಲಿಡಬೇಕು ಮತ್ತು ತ್ವರಿತವಾಗಿ ಆಮ್ಲಜನಕ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
‘ನವದೆಹಲಿಯಲ್ಲಿ ಸದ್ಯ ಹಾಸಿಗೆ, ಆಮ್ಲಜನಕದ ತೀವ್ರ ಕೊರತೆ ಇದೆ. ನಮ್ಮ ಹಂತದಲ್ಲಿ ಎಲ್ಲ ಅಗತ್ಯ ಪ್ರಯತ್ನ ಮಾಡುತ್ತಿದ್ದೇವೆ. ನಿಮ್ಮ ನೆರವಿನ ಅಗತ್ಯವೂ ಇದೆ’ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಡಿಆರ್ಡಿಒ 500 ಐಸಿಯು ಹಾಸಿಗೆಗಳನ್ನು ಸಜ್ಜುಗೊಳಿಸಿದ್ದಕ್ಕಾಗಿ ಪ್ರಧಾನಿಗೆ ಧನ್ಯವಾದ ಅರ್ಪಿಸಿರುವ ಅವರು, ಈ ಸಂಖ್ಯೆಯನ್ನು 1000ಕ್ಕೆ ಏರಿಸಬೇಕು. ಈವರೆಗೆ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಅಗತ್ಯ ಸಹಕಾರ ನೀಡಿದೆ. ಈಗ ಹಾಸಿಗೆ, ಆಮ್ಲಜನಕ ಒದಗಿಸುವ ಮೂಲಕ ಇನ್ನಷ್ಟು ನೆರವು ನೀಡಬೇಕಾಗಿದೆ ಎಂದಿದ್ದಾರೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಕೇಜ್ರಿವಾಲ್ ಅವರು, ಸದ್ಯ ದೆಹಲಿಯಲ್ಲಿ 25,500ಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ಲಭ್ಯವಿರುವ ಐಸಿಯು ಹಾಸಿಗೆಗಳ ಸಂಖ್ಯೆ 100ಕ್ಕೂ ಕಡಿಮೆ ಇದೆ. ಸೋಂಕು ಪ್ರಮಾಣ ಕಳೆದ 24 ಗಂಟೆಗಳಲ್ಲಿ ಶೇ 24ರಿಂದ 30ಕ್ಕೆ ಏರಿದೆ ಎಂದು ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.