
ಕೊಚ್ಚಿ: ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಮತ್ತು ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೇರಳದ ಕಾಂಗ್ರೆಸ್ ಮುಖಂಡರು ಭಾನುವಾರ ಇಲ್ಲಿ ಸಭೆ ನಡೆಸಿದರು.
’ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆಗಳು ಆರಂಭವಾಗಿದೆ’ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸಣ್ಣಿ ಜೋಸೆಫ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
’ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಸ್ಕ್ರೀನಿಂಗ್ ಸಮಿತಿ ಸಭೆ ನಡೆಯಬೇಕಿದೆ. ಕೇಂದ್ರ ಸಮಿತಿಯ ಅನುಮೋದನೆಯೂ ಸಿಗಬೇಕಿದೆ. ಸದ್ಯ ನಾವು ಪ್ರಾಥಮಿಕ ಹಂತದ ಸಭೆ ನಡೆಸಿದ್ದೇವೆ. ನನ್ನ ಉಮೇದುವಾರಿಕೆಯೂ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಯ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ’ ಎಂದು ಅವರು ಹೇಳಿದರು.
ಸಂಸದರು ಮತ್ತು ಹಾಲಿ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ, ಅಂತಿಮ ನಿರ್ಧಾರ ಆಗಿಲ್ಲ ಎಂದ ಸಣ್ಣಿ ಜೋಸೆಫ್, ಕಾಂಗ್ರೆಸ್ನ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರಿಗೆ ಇನ್ನೊಂದು ಅವಕಾಶ ಕೊಡುವಿರಾ ಎಂಬ ಪ್ರಶ್ನೆಗೆ, ’ಸದ್ಯ ಅವರು ನಮ್ಮ ಪಕ್ಷದಲ್ಲಿ ಇಲ್ಲ’ ಎಂದು ಉತ್ತರಿಸಿದರು.
ತ್ರಿಪೂಣಿತ್ತರ ಶಾಸಕ ಕೆ.ಬಾಬು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿರುವುದರಿಂದ, ಆ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದರು. ಹಿರಿಯ ಮುಖಂಡ ಕೆ. ಮುರಳೀಧರನ್ ಕಣಕ್ಕಿಳಿಯುವ ಬಲವಾದ ಸಾಧ್ಯತೆ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.