ತಿರುವನಂತಪುರ: ಸರ್ಕಾರಿ ಶಾಲೆಗಳಲ್ಲಿ ‘ಬ್ಯಾಕ್ಬೆಂಚರ್ಸ್’ ಎಂಬ ಪರಿಕಲ್ಪನೆಗೆ ವಿದಾಯ ಹೇಳಲು ಕೇರಳ ಸರ್ಕಾರ ಮುಂದಾಗಿದೆ.
‘ಸರ್ಕಾರಿ ಶಾಲೆಗಳಲ್ಲಿನ ಈಗಿರುವ ಸಾಲುಗಳ ಆಸನ ವ್ಯವಸ್ಥೆಯು ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿರುವ ಕಾರಣ, ಈ ಸಾಂಪ್ರದಾಯಿಕ ಪದ್ಧತಿಯನ್ನು ಕೈಬಿಡಲು ನಿರ್ಧರಿಸಲಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಗೆ ಸೂಕ್ತವಾದ ಆಸನ ವ್ಯವಸ್ಥೆಯನ್ನು ರೂಪಿಸಲು ತಜ್ಞರ ಸಮಿತಿ ರಚಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸಮಿತಿಯ ಸಲಹೆಯಂತೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಬ್ಯಾಕ್ಬೆಂಚರ್ಸ್ ಎಂಬ ಪರಿಕಲ್ಪನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಕಲಿಕೆಗೆ ಸಂಬಂಧಿಸಿದಂತೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಮಕ್ಕಳು ಜೀವನದಲ್ಲಿ ಅಥವಾ ಶಿಕ್ಷಣದಲ್ಲಿ ಹಿಂದೆ ಬೀಳಬಾರದು. ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಅವಕಾಶವನ್ನು ಕಲ್ಪಿಸುವುದು ನಮ್ಮ ಗುರಿಯಾಗಿದೆ. ಇದನ್ನು ಹೇಗೆ ಮಾಡಲು ಸಾಧ್ಯ ಎಂಬ ಕುರಿತು ಚಿಂತನೆ ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ.
‘ಹಲವು ದೇಶಗಳಲ್ಲಿ ವಿವಿಧ ಮಾದರಿಗಳನ್ನು ಅನುಸರಿಸುವ ಮೂಲಕ ಈ ಬ್ಯಾಕ್ಬೆಂಚ್ ಪರಿಕಲ್ಪನೆಯನ್ನು ತೊಡೆದುಹಾಕಲಾಗಿದೆ. ಇದೇ ರೀತಿಯಲ್ಲಿ ಇಲ್ಲಿಯೂ ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಎಲ್ಲರ ಅಭಿಪ್ರಾಯಗಳನ್ನು ಕೋರುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.