ADVERTISEMENT

ಕರ್ನಾಟಕದ ಕೋವಿಡ್ ಮಾರ್ಗಸೂಚಿಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧ: ಕೇರಳ ಸಿಎಂ

ಪಿಟಿಐ
Published 5 ಆಗಸ್ಟ್ 2021, 14:12 IST
Last Updated 5 ಆಗಸ್ಟ್ 2021, 14:12 IST
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್   

ತಿರುವನಂತಪುರಂ: ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕವು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ಪ್ರಯಾಣ ನಿರ್ಬಂಧಗಳನ್ನು ಹೇರಿದೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ, ಈ ನಿರ್ಬಂಧಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧವಾಗಿವೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವ ಪ್ರಯಾಣ ನಿರ್ಬಂಧಗಳನ್ನು ಹೇರಬಾರದು ಎಂದು ಹೇಳಿದೆ ಎಂದು ಅವರು ವಾದಿಸಿದ್ದಾರೆ.

'ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿರ್ದೇಶನದ ವಿರುದ್ಧ ಹೊಸ ನಿರ್ಬಂಧಗಳನ್ನು ವಿಧಿಸಿದೆ' ಎಂದು ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ADVERTISEMENT

ಶಾಸಕ ಎಕೆಎಂ ಅಶ್ರಫ್ (ಐಯುಎಂಎಲ್) ಅವರು ಬರೆದ ಪತ್ರಕ್ಕೆಉತ್ತರಿಸಿದ ಅವರು, ವಿವಿಧ ಉದ್ದೇಶಗಳಿಗಾಗಿ ನೆರೆಯ ರಾಜ್ಯಕ್ಕೆ ಪ್ರಯಾಣಿಸುತ್ತಿರುವ ರಾಜ್ಯದ ಜನರಿಗೆ ನಿರ್ಬಂಧಗಳಿಂದ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂಬಂಧ ರಾಜ್ಯ ಡಿಜಿಪಿ ಅನಿಲ್ ಕಾಂತ್ ಅವರು ಈಗಾಗಲೇ ಕರ್ನಾಟಕದ ಡಿಜಿಪಿಯನ್ನು ಸಂಪರ್ಕಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಚಿತಪಡಿಸಿದ್ದಾರೆ.

ಕರ್ನಾಟಕ ವಿಧಿಸಿರುವ ನಿರ್ಬಂಧಗಳನ್ನು ವಿವರಿಸಿದ ಮುಖ್ಯಮಂತ್ರಿ, ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಯೊಳಗಿನ ಆರ್‌ಟಿ-ಪಿಸಿಆರ್ ಕೋವಿಡ್ ನೆಗೆಟಿವ್ ವರದಿ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ 2 ರಿಂದಲೇ ಆ ರಾಜ್ಯದ ಅಧಿಕಾರಿಗಳು ತಲಪಾಡಿಯ ಗಡಿ ಚೆಕ್ ಪೋಸ್ಟ್‌ನಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹೋಗುವವರಿಗೆ ಮತ್ತು ಅಗತ್ಯ ಸೇವಾ ವಲಯಕ್ಕೆ ಸೇರಿದವರಿಗೆ ಈ ನಿರ್ಬಂಧಗಳಿಂದ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ರಾಜ್ಯ ಪೊಲೀಸರು ವಿಶೇಷ ಗಮನ ಹರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಆದ್ಯತೆಯ ಮೇರೆಗೆ ಮಂಗಳೂರಿಗೆ ಪ್ರತಿನಿತ್ಯ ಪ್ರಯಾಣಿಸುವವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸಲು ಗಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.