ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳುವ ಸಾಧ್ಯತೆಗಳಿದೆ.
ವಿವಾದಿತ ಗಣಿ ಕಂಪನಿ ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ಸ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ವೀಣಾ ಟಿ ಅವರ ಬೆಂಗಳೂರು ಮೂಲದ ಐಟಿ ಸಂಸ್ಥೆ ಎಕ್ಸ್ಲಾಜಿಕ್ ಸಲ್ಯೂಷನ್ ನಡುವೆ ನಡೆದಿದೆ ಎನ್ನಲಾದ ₹2.70 ಕೋಟಿ ಪಾವತಿ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಕ್ರಮ ಕೈಗೊಳ್ಳಲಿದೆ ಎನ್ನಲಾಗಿದೆ.
ಇದೇ ಪ್ರಕರಣ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ವೀಣಾ ಅವರ ವಿರುದ್ಧ ಗಂಭೀರ ವಂಚನೆ ತನಿಖಾ ಕಚೇರಿ (ಎಸ್ಎಫ್ಐಒ) ಆರೋಪ ಪಟ್ಟಿ ಸಲ್ಲಿಸಿತ್ತು. ಬೆನ್ನಲ್ಲೇ ಇದೀಗ ಇ.ಡಿ ಕೂಡ ಎಸ್ಎಫ್ಐಒನಿಂದ ಅಗತ್ಯ ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ.
ವೀಣಾ ಅವರ ವಿರುದ್ಧ ಕ್ರಮಕೈಗೊಳ್ಳಲು ಕೋರಿ ಇ.ಡಿ. ಮುಂದೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗಾಗಲೇ ಪ್ರಾಥಮಿಕ ತನಿಖೆಯನ್ನೂ ಇ.ಡಿ ನಡೆಸಿದೆ. ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.