
ತಿರುವನಂತಪುರ: ಕೇರಳ ಕಾಂಗ್ರೆಸ್ನ ನಾಯಕಿ ಆರ್. ರೇಷ್ಮಿ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡರು.
ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿ ಈಗಿನ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು.
ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಅವರು ಹಲವು ಬಾರಿ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ.
‘ಎರಡು ದಶಕಗಳಿಂದಲೂ ಕಾಂಗ್ರೆಸ್ನ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೇನೆ. 2021ರ ವಿಧಾನಸಭಾ ಚುನಾವಣೆ ನಂತರ ಕಹಿ ಅನುಭವಿಸಿದೆ. ಇದು ಪಕ್ಷದಿಂದ ದೂರವಾಗುವಂತೆ ಮಾಡಿತು’ ಎಂದು ರೇಷ್ಮಿ ಬಿಜೆಪಿಗೆ ಸೇರಿದ ನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಹಣಕಾಸು ಸಚಿವರ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತ ನಾನು, ಚುನಾವಣೆ ಬಳಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರಲು ಯತ್ನಿಸಿದೆ. ಆದರೆ ಸಹಕಾರ ದೊರಕಲಿಲ್ಲ’ ಎಂದರು.
ರೇಷ್ಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು, ‘ರೇಷ್ಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’ ಎಂದು ಪ್ರಕಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.