ಚುನಾವಣಾ ಆಯೋಗ
ತಿರುವನಂತಪುರ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಮುಂದೂಡುವಂತೆ ಕೇರಳ ಚುನಾವಣಾ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭಿಸುವುದು ಬೇಡ ಎಂದು ಎಸ್ಐಆರ್ ಕುರಿತು ಚರ್ಚಿಸಲು ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಕರೆದಿದ್ದ ಸಭೆಯಲ್ಲಿ ರಾಜ್ಯದ ಪ್ರತಿನಿಧಿಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸೆಪ್ಟೆಂಬರ್ 30ರೊಳಗೆ ಸಜ್ಜಾಗುವಂತೆ ಕೇಂದ್ರ ಚುನಾವಣಾ ಆಯೋಗವು (ಸಿಇಸಿ) ಈಚೆಗೆ ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿತ್ತು. ಈ ಮೂಲಕ ಅಕ್ಟೋಬರ್–ನವೆಂಬರ್ ವೇಳೆಗೆ ದೇಶದಾದ್ಯಂತ ಎಸ್ಐಆರ್ ನಡೆಸುವ ಸೂಚನೆ ನೀಡಿತ್ತು.
ಎಸ್ಐಆರ್ ಕುರಿತು ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಆಯೋಗದ ಹಿರಿಯ ಅಧಿಕಾರಿಗಳು ಈಚೆಗೆ ಮಹತ್ವದ ಸಭೆ ನಡೆಸಿದ್ದರು. ಎಸ್ಐಆರ್ ಪ್ರಕ್ರಿಯೆಗೆ ಸಜ್ಜಾಗಲು ಸೆಪ್ಟೆಂಬರ್ 30ರ ಗಡುವು ನಿಗದಿಪಡಿಸಲಾಗಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.