ಅಚ್ಯುತಾನಂದನ್
ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ)ನ ಹಿರಿಯ ಮುಖಂಡ ವಿ.ಎಸ್.ಅಚ್ಚುತಾನಂದನ್ ಅವರ ಆರೋಗ್ಯ ಚಿಂತಾಜನಕವಾಗಿದೆ.
ಮೂರು ದಿನಗಳ ಹಿಂದೆ ಅವರಿಗೆ ಹೃದಯಾಘಾತವಾಗಿತ್ತು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಗುರುವಾರ ಆಸ್ಪತ್ರೆಯಿಂದ ಹೊರಡಿಸಲಾದ ಆರೋಗ್ಯ ಬುಲೆಟಿನ್ ಪ್ರಕಾರ ಅಚ್ಯುತಾನಂದನ್ ಉಸಿರಾಟ, ರಕ್ತದೊತ್ತಡ ಮತ್ತು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.
ಶತಾಯುಷಿಯಾದ ಅಚ್ಯುತಾನಂದನ್ (101) ಕೇರಳದ ರಾಜಕೀಯದಲ್ಲಿ ಮೇರು ವ್ಯಕ್ತಿಯಾಗಿದ್ದಾರೆ. ಅಚ್ಯುತಾನಂದನ್ ಕಳೆದ ಕೆಲ ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಏಳು ಸಲ ಶಾಸಕರಾಗಿದ್ದ ಅಚ್ಯುತಾನಂದನ್, 2006 ರಿಂದ 2011ರವರೆಗೆ ಕೇರಳ ಮುಖ್ಯಮಂತ್ರಿಯಾಗಿದ್ದರು. ತಮ್ಮ ರಾಜಕೀಯ ಬದುಕಿನಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದಾರೆ.
ಕಮ್ಯುನಿಸ್ಟ್ ಪಕ್ಷದ ವಿಭಜನೆಯ ನಂತರ 1964ರಲ್ಲಿ ಭಾರತದ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ವನ್ನು ಸ್ಥಾಪಿಸಿದವರಲ್ಲಿ ಇವರು ಒಬ್ಬರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.