ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣವು ಕೇರಳದಲ್ಲಿ ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಈ ಪ್ರಕರಣದ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಬಿಜೆಪಿಯು ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದೆ.
ಕೇರಳ ಬಿಜೆಪಿಯ ಹಿರಿಯ ಶಾಸಕ ಒ.ರಾಜಗೋಪಾಲ್ ಅವರು ಒಂದು ದಿನದ ಉಪವಾಸ ಕೈಗೊಳ್ಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
'ರಾಜ್ಯದಾದ್ಯಂತ ಇರುವ ಬಿಜೆಪಿ ಜಿಲ್ಲಾ ಕೇಂದ್ರಗಳಲ್ಲಿ 18 ದಿನಗಳ ಕಾಲ ಇಂತಹ ಪ್ರತಿಭಟನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು' ಎಂದು ಅವರು ತಿಳಿಸಿದ್ದಾರೆ.
ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪಿಗಳೊಂದಿಗೆ ನಂಟು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರ್ ಅವರನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿದ್ದರು. ಇದಾದ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು.
ತಿರುವನಂತಪುರದ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ ಬಳಿಕ ಆರೋಪಿಗಳನ್ನು ಬಂಧಿಸಿ, 30 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿದ್ದು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಸರಿತಾ, ಸ್ವಪ್ನಾ ಸುರೇಶ್, ಸಂದೀಪ್ ನಾಯರ್ ಮತ್ತು ಫೈಜಲ್ ಫರೀದ್ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣದ ವಿರುದ್ಧ ಕಳೆದ ವಾರ ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.