ತಿರುವನಂತಪುರ: ಜೈಲಿನಲ್ಲಿರುವ ಕೈದಿಗಳ ಮಕ್ಕಳ ಶಿಕ್ಷಣಕ್ಕಾಗಿ ಕೇರಳ ಸರ್ಕಾರವು ₹20 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ₹15 ಲಕ್ಷವನ್ನು ಮೂಲಭೂತ ಶಿಕ್ಷಣಕ್ಕಾಗಿ ಹಾಗೂ ₹5 ಲಕ್ಷವನ್ನು ವೃತ್ತಿಪರ ಶಿಕ್ಷಣಕ್ಕಾಗಿ ಮಂಜೂರು ಮಾಡಲಾಗಿದೆ ಎಂದು ರಾಜ್ಯ ಸಾಮಾಜಿಕ ನ್ಯಾಯ ಸಚಿವರಾದ ಕೆ.ಕೆ.ಶೈಲಜಾ ತಿಳಿಸಿದ್ದಾರೆ.
ಈ ಎಲ್ಲಾ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಪರಿಚಯಿಸಬೇಕು ಎಂಬ ಉದ್ದೇಶದಿಂದ ಸಾಮಾಜಿಕ ನ್ಯಾಯ ಇಲಾಖೆಯು ಈ ಶೈಕ್ಷಣಿಕ ನೆರವನ್ನು ಜಾರಿಗೊಳಿಸಿದೆ. ‘ಕುಟುಂಬದಲ್ಲಿ ದುಡಿಯುವ ವ್ಯಕ್ತಿಗಳು ಜೈಲು ಸೇರಿದಾಗ ಮಕ್ಕಳ ಶಿಕ್ಷಣಕ್ಕೂ ತೊಡಕ್ಕಾಗುತ್ತದೆ. ಅವರ ಶಿಕ್ಷಣ, ಅಧ್ಯಯನಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ಯೋಜನೆ ಜಾರಿ ಮಾಡಿದೆ’ ಎಂದು ಸಚಿವರು ಹೇಳಿದ್ದಾರೆ.
ಮೂಲಭೂತ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಯಡಿಯಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ 1ರಿಂದ 5ನೇ ತರಗತಿ ಮಕ್ಕಳಿಗೆ ಪ್ರತಿ ತಿಂಗಳು ₹300, 6ರಿಂದ 10ನೇ ತರಗತಿ ಮಕ್ಕಳಿಗೆ ₹500, ಹಾಗೂ ಪದವಿ ಪೂರ್ವ ಓದುತ್ತಿರುವವರಿಗೆ ₹750, ಪದವಿ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ₹1,000 ನೀಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಜೀವಾವಧಿ ಅಥವಾ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೈದಿಗಳ ಮಕ್ಕಳ ಶಿಕ್ಷಣಕ್ಕೂವೃತ್ತಿಪರ ಶಿಕ್ಷಣಕ್ಕಾಗಿ ನೆರವು ಯೋಜನೆಯಡಿ ನೆರವು ನೀಡಲಾಗುತ್ತದೆ. ವಿವಿಧ ಕೋರ್ಸ್ಗಳಿಗೆ ನಿಗದಿಯಾಗಿರುವ ಶುಲ್ಕದರದ ಪ್ರಕಾರ ಗರಿಷ್ಠ ₹1 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಬಡತನ ರೇಖೆಗಿಂತ ಕಡಿಮೆ ಆದಾಯ ಹೊಂದಿರುವ ಮಕ್ಕಳು ಈ ಸೌಲಭ್ಯ ಪಡೆಯಲಿದ್ದಾರೆ. ಒಂದು ವೇಳೆ ಹೆತ್ತವರಿಬ್ಬರು ಜೈಲಿನಲ್ಲಿದ್ದು, ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಬಡತನ ರೇಖೆಗಿಂತ ಹೆಚ್ಚು ಆದಾಯ ಹೊಂದಿದ್ದರೂ ಅಂತಹ ಮಕ್ಕಳ ಶಿಕ್ಷಣಕ್ಕೆ ಹಣ ದೊರೆಯುತ್ತದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.