ಕೊಚ್ಚಿ: ಸಿಸ್ಟರ್ ಅಭಯಾ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕ್ಯಾಥೋಲಿಕ್ ಪಾದ್ರಿ ಥಾಮಸ್ ಕೊಟ್ಟೂರು ಮತ್ತು ಸನ್ಯಾಸಿನಿ ಸೆಫಿಗೆ ಕೇರಳ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಸಿ. ಜಯಚಂದ್ರನ್ ಅವರನ್ನೊಳಗೊಂಡ ಪೀಠವು, ಶಿಕ್ಷೆಯನ್ನು ಅಮಾನತುಗೊಳಿಸಿ, ತಲಾ ₹5 ಲಕ್ಷ ಬಾಂಡ್ ಖಾತರಿ ಒದಗಿಸುವಂತೆ ಸೂಚಿಸಿ, ಜಾಮೀನು ನೀಡಿದೆ.
ವಿಶೇಷ ಸಿಬಿಐ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ, ಹೈ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮೊದಲು ಸ್ಥಳೀಯ ಪೊಲೀಸರು, ನಂತರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿ, ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದರು. 2008ರಲ್ಲಿ ಸಿಬಿಐ ತನಿಖೆ ನಡೆಸಲು ಆರಂಭಿಸಿತು. ಹಲವು ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದರು.
21 ವರ್ಷದ ಸಿಸ್ಟರ್ ಅಭಯಾ ಅವರ ದೇಹ 1992ರಲ್ಲಿ ಕೊಟ್ಟಾಯಂನಲ್ಲಿರುವ ಸೇಂಟ್ ಪಿಯಸ್ ಕಾನ್ವೆಂಟ್ ಬಾವಿಯಲ್ಲಿ ಪತ್ತೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.