ADVERTISEMENT

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 15:43 IST
Last Updated 25 ಏಪ್ರಿಲ್ 2024, 15:43 IST
   

ತಿರುವನಂತಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಬೇಕೆಂದು ಕೋರಲು ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ರಾಜ್ಯದ ವಿವಿಧ ಚರ್ಚ್‌ಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್‌ ಗುರುವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಕೇರಳದ ಚರ್ಚ್‌ಗಳ ಮುಖ್ಯಸ್ಥರನ್ನು ಭೇಟಿಯಾಗುವ ಮೂಲಕ ಲೆಫ್ಟಿನೆಂಟ್‌ ಗವರ್ನರ್‌ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಯೋಗಕ್ಕೆ ಬರೆದ ಪತ್ರದಲ್ಲಿ ಸತೀಶನ್‌ ಆರೋಪಿಸಿದ್ದಾರೆ.

‘ಎರಡು ದಿನಗಳ ಭೇಟಿಗಾಗಿ ಕೇರಳಕ್ಕೆ ಬಂದಿರುವ ಲೆಫ್ಟಿನೆಂಟ್‌ ಗವರ್ನರ್‌ ಅವರು ಬಿಜೆಪಿಗೆ ಬೆಂಬಲ ನೀಡುವಂತೆ, ಸಿರೋ ಮಲಬಾರ್ ಚರ್ಚ್, ಜಾಕೋಬೈಟ್ ಸಿರಿಯನ್ ಆರ್ಥಡಾಕ್ಸ್‌ ಚರ್ಚ್‌, ಮಲಂಗರ ಆರ್ಥಡಾಕ್ಸ್‌ ಸಿರಿಯನ್ ಚರ್ಚ್‌ಗಳ ಮುಖ್ಯಸ್ಥರಲ್ಲಿ ವಿನಂತಿಸಿದ್ದಾರೆ’ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಕೆಲವು ಚರ್ಚ್‌ಗಳ ಮುಖ್ಯಸ್ಥರು ಲೆಫ್ಟಿನೆಂಟ್‌ ಗವರ್ನರ್‌ ಅವರನ್ನು ಭೇಟಿಯಾಗಲು ನಿರಾಕರಿಸಿರುವುದಾಗಿಯೂ ತಿಳಿದುಬಂದಿದೆ ಎಂದು ಸತೀಶನ್ ತಿಳಿಸಿದ್ದಾರೆ.

ರಾಜ್ಯಪಾಲರು ರಾಜ್ಯಗಳ ಸಾಂವಿಧಾನಿಕ ಮುಖ್ಯಸ್ಥರಾಗಿದ್ದು ಅವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗುವುದನ್ನು ನಿರ್ಬಂಧಿಸಲಾಗಿದೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.